
ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಹಂಚಿಕೆಯಾಗಿರುವ ಖಾತೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.
ಖಾತೆ ಹಂಚಿಕೆಯಾದ ಮರುದಿನ ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗಾರೆಡ್ಡಿ, “ನಾನು ಯಾರ ಮೇಲೂ ಕೋಪಗೊಂಡಿಲ್ಲ. ಆದರೆ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಸಹೋದ್ಯೋಗಿಯೊಬ್ಬರ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಿಕೊಡುತ್ತಿದ್ದೇನೆ” ಎಂದು ಪ್ರಕಟಿಸಿದರು.

ಆದರೆ, ತಾವು ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, “ನಾನು ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯಲಿದ್ದೇನೆ. ಶಾಸಕನಾಗಿ ಸದನದಲ್ಲಿ ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತೇನೆ” ಎಂದು ತಿಳಿಸಿದರು.
ಬೆಂಗಳೂರು ನಗರಾಭಿವೃದ್ಧಿ ಖಾತೆಯ ಭರವಸೆ ಕೈತಪ್ಪಿದ್ದೇ ಅಸಮಾಧಾನಕ್ಕೆ ಕಾರಣ:
ತಮ್ಮ ರಾಜೀನಾಮೆಗೆ ಪ್ರಮುಖ ಕಾರಣವನ್ನು ಬಹಿರಂಗಪಡಿಸಿದ ರಾಮಲಿಂಗಾರೆಡ್ಡಿ, “ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲೇ ನನಗೆ ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆ ಸಮಯದಲ್ಲಿ ನನಗೆ ಸಚಿವ ಸ್ಥಾನವೇ ಬೇಡ ಎಂದು ನಾನು ಹೇಳಿದ್ದೆ. ಆದರೆ ಡಿ.ಕೆ. ಶಿವಕುಮಾರ ಅವರು ಖುದ್ದಾಗಿ ತಾವು ಮುಖ್ಯಮಂತ್ರಿಯಾದಾಗ ಖಂಡಿತವಾಗಿಯೂ ಈ ಇಲಾಖೆಯನ್ನು ತಮಗೇ ನೀಡುವುದಾಗಿ ಮಾತು ಕೊಟ್ಟಿದ್ದರು,” ಎಂದು ನೆನಪಿಸಿಕೊಂಡರು.
ಬೆಂಗಳೂರು ನಗರಾಭಿವೃದ್ಧಿ ಖಾತೆಯ ನಿರೀಕ್ಷೆಯಲ್ಲಿದ್ದ ತಮಗೆ ಈಗ ಬೇರೆ ಖಾತೆ ನೀಡಿರುವುದು ತೀವ್ರ ಬೇಸರ ತರಿಸಿದೆ ಎಂದು ಅವರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ನನಗೆ ಯಾರ ಮೇಲೆಯೂ ವೈಯಕ್ತಿಕವಾಗಿ ಕೋಪವಿಲ್ಲ. ಇದು ಕೇವಲ ಖಾತೆ ಹಂಚಿಕೆಗೆ ಸಂಬಂಧಿಸಿದ ನನ್ನ ವೈಯಕ್ತಿಕ ನಿರ್ಧಾರ” ಎಂದು ಹೇಳಿದ್ದಾರೆ.
ಹಿರಿಯ ನಾಯಕರ ಈ ದಿಢೀರ್ ರಾಜೀನಾಮೆ ನಿರ್ಧಾರದಿಂದಾಗಿ ರಾಜ್ಯ ರಾಜಕಾರಣದಲ್ಲಿ ಹಾಗೂ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ