ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ ಬಗ್ಗೆ ಬಹಿರಂಗವಾಗಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೂ ಅಲ್ಲದೆ, ಆಹಾರ ಇಲಾಖೆ ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ತಮಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಹಂಚಿಕೆ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ಕೆ.ಎಚ್. ಮುನಿಯಪ್ಪ, ತಮಗೆ ಸಮಾಜ ಕಲ್ಯಾಣ ಅಥವಾ ಕೃಷಿಯಂತಹ ಪ್ರಮುಖ ಇಲಾಖೆಗಳ ನಿರೀಕ್ಷೆಯಿತ್ತು ಎಂದು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಖಾತೆ ಹಂಚಿಕೆಯಲ್ಲಿ ಹಿರಿತನವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.”ನಾನು ಎಂಟು ಬಾರಿ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದೇನೆ. ಆದರೆ ಈ ಖಾತೆ ಹಂಚಿಕೆಯಲ್ಲಿ ಹಿರಿತನವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಪಕ್ಷದಲ್ಲಿ ಎಲ್ಲ ನಾಯಕರನ್ನೂ ಸಮಾನವಾಗಿ ಕಾಣಬೇಕು, ಪ್ರಸ್ತುತ ನಡೆದಿರುವ ಹಂಚಿಕೆ ಸಮತೋಲನದಿಂದ ಕೂಡಿಲ್ಲ,” ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ಪಕ್ಷದ ಹೈಕಮಾಂಡ್ ನಡೆಗೆ ತಾಯಿ ಮತ್ತು ಮಕ್ಕಳ ಉದಾಹರಣೆ ನೀಡಿದ ಮುನಿಯಪ್ಪ, “ಎಐಸಿಸಿ ಅಧ್ಯಕ್ಷರು ಪಕ್ಷದಲ್ಲಿ ತಾಯಿಯ ಸ್ಥಾನದಲ್ಲಿದ್ದಾರೆ. ತಾಯಿ ಎಲ್ಲ ಮಕ್ಕಳನ್ನೂ ಸಮಾನವಾಗಿ ನೋಡಬೇಕು. ಆದರೆ ಖಾತೆ ಹಂಚಿಕೆ ಸರಿಯಾಗಿ ನಡೆದಿಲ್ಲ. ಇದನ್ನು ಸಮತೋಲಿತ ರೀತಿಯಲ್ಲಿ ಮಾಡಬೇಕಿತ್ತು, ಆದರೆ ಹಾಗಾಗಿಲ್ಲ” ಎಂದು ಹೇಳಿದರು.

2028ರ ಚುನಾವಣೆಗೆ ಕಷ್ಟವಾಗಬಹುದು
ಇದೇ ವೇಳೆ ಪಕ್ಷದ ನಾಯಕತ್ವಕ್ಕೆ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದ ಅವರು, “ಹಿರಿಯ ನಾಯಕರಲ್ಲಿ ಮೂಡಿರುವ ಈ ಅಸಮಾಧಾನವು ಭವಿಷ್ಯದಲ್ಲಿ ಪಕ್ಷದ ಬೆಳವಣಿಗೆಗೆ ಮಾರಕವಾಗಬಹುದು. ಇದೇ ರೀತಿ ನಿರ್ಧಾರಗಳನ್ನು ಕೈಗೊಳ್ಳುತ್ತಾ ಹೋದರೆ, 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಕಷ್ಟವಾಗಬಹುದು ” ಎಂದು ಹೇಳಿದರು.
ಈಗಾಗಲೇ ಈ ವಿಷಯವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಉಸ್ತುವಾರಿ ರಣದೀಪ ಸುರ್ಜೆವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದ ಮುನಿಯಪ್ಪ, ಪಕ್ಷದ ವರಿಷ್ಠರು ಈ ಗೊಂದಲಗಳನ್ನು ಬಗೆಹರಿಸಿ, ತಮಗೆ ನ್ಯಾಯ ಒದಗಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಶಿವಕುಮಾರ ಸರ್ಕಾರಕ್ಕೆ ಆರಂಭದಲ್ಲೇ ಶಾಕ್ : ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

2019ರ ಲೋಕಸಭಾ ಚುನಾವಣೆಯಲ್ಲಿ, ಕೋಲಾರ ಕ್ಷೇತ್ರದಲ್ಲಿ ಕೆಎಚ್ ಮುನಿಯಪ್ಪ ಸೋಲು ಅನುಭವಿಸಿದ್ದರು. ಇದಾದ ನಂತರ, ರಾಜ್ಯ ರಾಜಕಾರಣಕ್ಕೆ ಆಗಮಿಸಿದ ಇವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಕಳೆದ ಸಿದ್ದರಾಮಯ್ಯನವರ ಸರ್ಕಾರದಲ್ಲೂ ಮುನಿಯಪ್ಪಗೆ ಆಹಾರ ಖಾತೆಯನ್ನು ಕೊಡಲಾಗಿತ್ತು. ಈಗ, ಡಿಕೆ ಶಿವಕುಮಾರ್ ಸರ್ಕಾರದಲ್ಲೂ ಅದೇ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆಯನ್ನು ನೀಡಲಾಗಿದೆ. ಇದಕ್ಕೆ ಮುನಿಯಪ್ಪ ಅಸಮಾಧಾನವನ್ನು ವ್ಯಕ್ತ ಪಡಿಸಿ, ನನ್ನ ಹಿರಿತನವನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ರಾಮಲಿಂಗಾರೆಡ್ಡಿ ರಾಜೀನಾಮೆ
ಮತ್ತೊಂದೆಡೆ, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಎರಡೇ ದಿನಗಳಲ್ಲಿ ಹಿರಿಯ ನಾಯಕ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಮಗೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭರವಸೆ ನೀಡಿ, ಕೊನೆಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆಯನ್ನು ನೀಡಿರುವುದಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಮ್ಮ ರಾಜೀನಾಮೆ ಪತ್ರದಲ್ಲಿ, “ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲದ ಕಾರಣ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ರೆಡ್ಡಿ ಉಲ್ಲೇಖಿಸಿದ್ದಾರೆ.
“ನನ್ನ ನಿರ್ಧಾರವು ಅಧಿಕಾರದ ಹಪಾಹಪಿಯಿಂದ ಕೂಡಿದ್ದಲ್ಲ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ನನಗೆ ನೀಡಿದ್ದ ಭರವಸೆಯನ್ನು ಈಡೇರಿಸದ ಕಾರಣಕ್ಕೆ ನಾನು ಬೇಸತ್ತು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ತಾವು ಕೇವಲ ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿರುವುದಾಗಿ ತಿಳಿಸಿದ ಅವರು, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ ಮತ್ತು ಪಕ್ಷಕ್ಕೆ ನಿಷ್ಠರಾಗಿ ಇರುವುದಾಗಿ ಪುನರುಚ್ಚರಿಸಿದ್ದಾರೆ.

ಪ್ರಮುಖ ಸುದ್ದಿ :-   ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆ

ಸಿಎಂ ಶಿವಕುಮಾರ ಪ್ರತಿಕ್ರಿಯೆ
ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ಸೃಷ್ಟಿಯಾಗಿರುವ ರಾಜಕೀಯ ಹೈಡ್ರಾಮಾಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಪ್ರತಿಕ್ರಿಯಿಸಿದ್ದು, ಪಕ್ಷದ ಆಂತರಿಕ ಚರ್ಚೆಯ ಮೂಲಕ ಈ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.
ಎಂಟು ಬಾರಿ ಶಾಸಕರಾಗಿರುವ ರಾಮಲಿಂಗಾರೆಡ್ಡಿ ಅವರು ತಮ್ಮ “ಅತ್ಯಂತ ಆಪ್ತ ಸ್ನೇಹಿತರಲ್ಲಿ ಒಬ್ಬರು” ಎಂದು ಬಣ್ಣಿಸಿದ ಶಿವಕುಮಾರ, “ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಕ್ಷದ ಹಿರಿಯ ನಾಯಕತ್ವವು ಈ ಸಮಸ್ಯೆಯನ್ನು ಹತ್ತಿರದಿಂದ ಗಮನಿಸುತ್ತಿದ್ದು, ಶೀಘ್ರದಲ್ಲೇ ಎಲ್ಲ ಗೊಂದಲಗಳಿಗೂ ತೆರೆ ಬೀಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹಿರಿಯ ನಾಯಕರ ನಡುವಿನ ಈ ಖಾತೆ ಅಸಮಾಧಾನವು ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೈಕಮಾಂಡ್ ಈ ಆಂತರಿಕ ಬೇಗುದಿಯ ವಿಚಾರದಲ್ಲಿ ಮಧ್ಯಪ್ರವೇಶಿಸಿ ಶಾಂತಗೊಳಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement