
ಕೊಪ್ಪಳ: ಮೊಬೈಲ್ ಗೇಮ್ ಆಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮಗ ತನ್ನ ತಂದೆ-ತಾಯಿ ಹಾಗೂ ಸಹೋದರಿ ಮೇಲೆಯೇ ಚಾಕುವಿನಿಂದ ದಾಳಿ ಮಾಡಿದ್ದು, ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಪಿಯುಸಿ ಓದುತ್ತಿರುವ ಸಾಯಿ ವೆಂಕಟ ಮಣಿದೀಪ (18) ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮಗ ಚಾಕುವಿನಿಂದ ತಾಯಿ ಸೌಜನ್ಯ (40), ಅಕ್ಕ ಪ್ರಗತಿ (19) ಮತ್ತು ತಂದೆ ವೆಂಕಟ ನಾಯ್ಡು (45) ಅವರ ಮೇಲೆ ದಾಳಿ ಮಾಡಿದ ಬಳಿಕ ತನಗೂ ಇರಿದುಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಅಕ್ಕ ಸ್ಥಳದಲ್ಲಿಯೇ ಮೃತಪಟ್ಟರೆ, ಆಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರವಾಗಿ ಗಾಯಗೊಂಡಿದ್ದ ತಂದೆ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ತಾಯಿಯನ್ನು ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ. ಕುಟುಂಬಸ್ಥರ ಮೇಲೆ ಚಾಕು ದಾಳಿ ಮಾಡಿದ ಬಳಿಕ ತನಗೂ ಇರಿದುಕೊಂಡು ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸಾಯಿ ವೆಂಕಟ ಆನ್ಲೈನ್ ಗೇಮ್ ವ್ಯಸನಿಯಾಗಿದ್ದು, ತಂದೆ-ತಾಯಿ ಇದನ್ನು ವಿರೋಧಿಸಿ ಬುದ್ಧಿವಾದ ಹೇಳಿದ್ದಕ್ಕಾಗಿ ಅವರ ಮೇಲೆ ತೆಗೆದುಕೊಂಡು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿಯ ಅಜ್ಜ ನೀಡಿದ ದೂರಿನ ಮೇರೆಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ