
ರಾಂಚಿ : ರಾಂಚಿಯ ನಿವಾರಣ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಚೇರಿಯ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆಸಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಇಬ್ಬರು ಅಪರಿಚಿತ ವ್ಯಕ್ತಿಗಳು ಆರ್ಎಸ್ಎಸ್ ಕಚೇರಿಯ ಆವರಣದೊಳಗೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಎಸೆಯಲು ಯತ್ನಿಸಿದ್ದಾರೆ. ಆದರೆ, ಎರಡೂ ಬಾಟಲಿಗಳು ಕಚೇರಿಯ ಆವರಣದ ಗೋಡೆಯನ್ನು ದಾಟುವ ಮುನ್ನವೇ ಹೊರಗಡೆ ಬಿದ್ದಿದ್ದರಿಂದ ಕಚೇರಿಗೆ ಯಾವುದೇ ಹಾನಿ ಸಂಭವಿಸಿಲ್ಲ.
ಘಟನೆ ನಡೆದ ತಕ್ಷಣವೇ ಎಚ್ಚೆತ್ತುಕೊಂಡ ರಾಂಚಿ ಪೊಲೀಸರು ತನಿಖೆ ಆರಂಭಿಸಿದ್ದು, ಶಂಕಿತರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸೂಕ್ತ ತನಿಖೆಗೆ ಆದೇಶಿಸಲಾಗಿದೆ ಎಂದು ರಾಂಚಿ ನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪಾರಸ್ ರಾಣಾ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಈ ದಾಳಿಯ ಯತ್ನದಲ್ಲಿ ಇಬ್ಬರು ಭಾಗಿಯಾಗಿರುವುದು ತಿಳಿದುಬಂದಿದೆ. ಪ್ರಕರಣದ ಪೂರ್ಣ ಪ್ರಮಾಣದ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತಜ್ಞರು ಸೇರಿದಂತೆ ಹಲವು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ.

ಆರ್ಎಸ್ಎಸ್ ಕಚೇರಿಯತ್ತ ಇಬ್ಬರು ಶಂಕಿತರು ಪೆಟ್ರೋಲ್ ಬಾಂಬ್ ಎಸೆಯಲು ಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಈ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಮೊದಲ ಯತ್ನದಲ್ಲಿ ಬಾಟಲಿಯಲ್ಲಿದ್ದ ಪೆಟ್ರೋಲ್ಗೆ ಸರಿಯಾಗಿ ಬೆಂಕಿ ಹೊತ್ತಿಕೊಳ್ಳುವ ಮುನ್ನವೇ ಅದರಲ್ಲಿದ್ದ ಉರಿಯುತ್ತಿದ್ದ ಬತ್ತಿ ಕೆಳಗೆ ಬಿದ್ದಿದೆ. ಇದರಿಂದಾಗಿ ಪೆಟ್ರೋಲ್ ಬಾಂಬ್ ವಿಫಲಗೊಂಡಿದೆ. ತಕ್ಷಣವೇ ಅವರು ಎರಡನೇ ಬಾಟಲಿಯನ್ನು ಎಸೆದಿದ್ದಾರೆ, ಆದರೆ ಅದು ಕಚೇರಿಯ ಆವರಣದಿಂದ ಹೊರಗೇ ಬಿದ್ದಿದೆ.
ದುಷ್ಕರ್ಮಿಗಳು ಖಾಲಿ ಚಿಲ್ಲಿ ಸಾಸ್ (ಖಾರದ ಸಾಸ್) ಬಾಟಲಿಗಳಿಗೆ ಪೆಟ್ರೋಲ್ ತುಂಬಿಸಿ, ಅವುಗಳನ್ನು ಸುಧಾರಿತ ಪೆಟ್ರೋಲ್ ಬಾಂಬ್ಗಳಾಗಿ ಮಾರ್ಪಡಿಸಿ ಈ ದಾಳಿಗೆ ಬಳಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ನಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ರಾಮನ್, ಎರಡು ಬಾಟಲಿಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತಂಡವು ಅವುಗಳನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.
“ಈ ಪ್ರಕರಣದಲ್ಲಿ ಸೈಬರ್ ಡಿಎಸ್ಪಿ ಮತ್ತು ಇತರ ಪೊಲೀಸ್ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ. ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆಯ ನಂತರ, ಕೆಲವು ಶಂಕಿತರ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ” ಎಂದು ಅವರು ಹೇಳಿದ್ದಾರೆ.
ಆರ್ಎಸ್ಎಸ್ ಕಚೇರಿಗೆ ಬಿಜೆಪಿ ನಾಯಕರ ಭೇಟಿ
ದಾಳಿಯ ಯತ್ನ ನಡೆದಿರುವ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಅವರು ಪಕ್ಷದ ಹಲವು ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ರಾಂಚಿಯ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು, ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ದಾಳಿಗೆ ಯತ್ನಿಸಿದವರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ