ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಜಂತರ್ ಮಂತರ್‌ನಲ್ಲಿ ಸಿಜೆಪಿ (CJP) ಪ್ರತಿಭಟನಾಕಾರರ ವಿರುದ್ಧ ನಡೆದಿರುವ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಈ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಅವರು ಅರ್ಜಿದಾರರ ಪರ ವಕೀಲರಿಗೆ, “ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಹೇಳಿದ ಘಟನೆ ಗಮನ ಸೆಳೆಯಿತು. ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ, ಪೊಲೀಸ್ ದೌರ್ಜನ್ಯವನ್ನು ತೋರಿಸುವ ವಿಡಿಯೊಗಳು ಲಭ್ಯವಿವೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯಕಾಂತ, “ನಮಗೆ ವಿಡಿಯೊಗಳಲ್ಲಿ ಆಸಕ್ತಿ ಇಲ್ಲ. ವಿಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವೂ ಇಲ್ಲ” ಎಂದು ಹೇಳಿದರು.

ವಿಚಾರಣೆ ವೇಳೆ ವಕೀಲರು, ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ನೀಟ್ (NEET) ಪರೀಕ್ಷೆಯ ಸಮರ್ಪಕ ನಿರ್ವಹಣೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯಲ್ಲಿ ಸುಧಾರಣೆ ಸೇರಿದಂತೆ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ವಾದಿಸಿದರು. ಇದಕ್ಕೆ ಸಿಜೆಐ, “ತುಂಬ ಧನ್ಯವಾದಗಳು” ಎಂದು ಪ್ರತಿಕ್ರಿಯಿಸಿದರು.

ಇದಕ್ಕೂ ಮುನ್ನ ಮಂಗಳವಾರ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಕೂಡ ನಿರಾಕರಿಸಿತ್ತು. “ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ” ಎಂದು ಹೈಕೋರ್ಟ್ ಹೇಳಿತ್ತು.

ಪ್ರಮುಖ ಸುದ್ದಿ :-   ಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆ

ಪೊಲೀಸ್ ಕ್ರಮ ಅತಿರೇಕದ್ದು : ಅರ್ಜಿ
ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ, ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮ ಅಸಮತೋಲನ ಮತ್ತು ಅತಿರೇಕದದ್ದಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯಲ್ಲಿ ಮಾಡಲಾದ ಆರೋಪಗಳು ಹಾಗೂ ಕೋರಿರುವ ಪರಿಹಾರಗಳನ್ನು ನ್ಯಾಯಾಲಯ ವಿಚಾರಣೆ ವೇಳೆ ಪರಿಶೀಲಿಸುವ ಸಾಧ್ಯತೆಯಿದೆ.
ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಹಲವು ಕಾನೂನು ಹೋರಾಟಗಳು ಮುಂದುವರಿದಿವೆ. ಸಿಪಿಐ(ಎಂ) ನಾಯಕಿ ಐಶೆ ಘೋಷ್ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಪ್ರತಿಭಟನಾ ಸ್ಥಳದಲ್ಲಿ ದೆಹಲಿ ಪೊಲೀಸರು ವಿಡಿಯೊ ಚಿತ್ರೀಕರಣದ ಮೂಲಕ ಪ್ರತಿಭಟನಾಕಾರರ ಮೇಲೆ ನಿಗಾ ವಹಿಸುತ್ತಿದ್ದಾರೆ ಎಂಬ ಆರೋಪಗಳನ್ನು ದೆಹಲಿ ಹೈಕೋರ್ಟ್ ಪರಿಶೀಲಿಸುತ್ತಿದೆ.
ಈ ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಂತರ್ ಮಂತರ್‌ನಲ್ಲಿ ನಡೆಯುವ ವಿಡಿಯೊ ಚಿತ್ರೀಕರಣವು ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶಕ್ಕಾಗಿಯೇ ನಡೆಯುತ್ತಿದೆ, ಪ್ರತಿಭಟನಾಕಾರರ ಮೇಲೆ ನಿಗಾ ಇಡುವುದಕ್ಕಾಗಿ ಅಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಪ್ರಮುಖ ಸುದ್ದಿ :-   ಜನ್ಮದಿನ ಸಂಭ್ರಮದಿಂದ ಪ್ರಧಾನಿ ನಿವಾಸದ ಬಳಿ ಧರಣಿ ವರೆಗೆ ; ಕಾಂಗ್ರೆಸ್‌ನ ಅನಿರೀಕ್ಷಿತ ಪ್ರತಿಭಟನೆ ನಡೆದದ್ದು ಹೇಗೆ...?

ಸೋನಂ ವಾಂಗ್ಚುಕ್ ಮತ್ತು ಸಿಜೆಪಿ ಹೋರಾಟ 
ಈ ಪ್ರತಿಭಟನೆಗಳು ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಸಿಜೆಪಿಗೆ ಸಂಬಂಧಿಸಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಅವರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹೋರಾಟಗಳ ಪರಿಣಾಮವಾಗಿ ದೆಹಲಿ ಹೈಕೋರ್ಟ್‌ನಲ್ಲಿ ಅನೇಕ ಅರ್ಜಿಗಳು ದಾಖಲಾಗಿವೆ. ಸೋನಂ ವಾಂಗ್ಚುಕ್ ಅವರ ವೈದ್ಯಕೀಯ ಚಿಕಿತ್ಸೆ, ಸರ್ಕಾರಿ ಆಸ್ಪತ್ರೆಯಲ್ಲಿ ಅವರ ಮುಂದುವರಿದ ದಾಖಲಾತಿ, ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ನಿಗಾ ಆರೋಪಗಳು ಹಾಗೂ ಪ್ರತಿಭಟನೆಗಳ ಸಂದರ್ಭದಲ್ಲಿ ದೆಹಲಿ ಪೊಲೀಸರ ನಡೆ-ನುಡಿಗೆ ಸಂಬಂಧಿಸಿದ ಹಲವು ಪ್ರಕರಣಗಳು ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿವೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement