ವಿಡಿಯೊ | 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್ ; ಕೇಂದ್ರದ ಭರವಸೆ ಬಳಿಕ ಸೂಪ್ ಸೇವನೆ

ನವದೆಹಲಿ: 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೆದಾಂತ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರು, ಬೆಂಬಲಿಗರು, ವೈದ್ಯರು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಕೇಂದ್ರ ಸರ್ಕಾರದ ಭರವಸೆಗಳ ಬಳಿಕ ವಾಂಗ್ಚುಕ್ ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತುಕೊಂಡು 26 ದಿನಗಳ ನಂತರ ಮೊದಲ ಬಾರಿಗೆ ನೀರಲ್ಲದ ಪಾನೀಯವಾಗಿ ಸೂಪ್ ಸೇವಿಸಿದರು. ಉಪವಾಸ ಅಂತ್ಯಗೊಳಿಸಿದ ತಕ್ಷಣ ಮಾತನಾಡಿದ ವಾಂಗ್ಚುಕ್, “ಹಸಿವು ಇನ್ನೂ ಉತ್ತಮ ರುಚಿ ನೀಡುತ್ತದೆ” ಎಂದು ಹೇಳಿದರು. ಬಳಿಕ ಸೂಪ್ ರುಚಿಯಾಗಿದ್ದರೂ, “ಹಸಿವಿನ ರುಚಿಯೂ ಕೆಟ್ಟದ್ದಲ್ಲ” ಎಂದರು.
ಸುಮಾರು ಏಳು ನಿಮಿಷಗಳ ವಿಡಿಯೊದಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್, ಲೇಹ್-ಲಡಾಖ್ ಏಪೆಕ್ಸ್ ಬಾಡಿಯ ಹಿರಿಯ ಮುಖಂಡರು, ವೈದ್ಯರು ಹಾಗೂ ವಾಂಗ್ಚುಕ್ ಅವರ ಕುಟುಂಬ ಸದಸ್ಯರು ಅವರ ಸುತ್ತ ನಿಂತಿರುವುದು ಕಂಡುಬಂದಿದೆ.
ಈ ವೇಳೆ ಸರ್ಕಾರದ ಭರವಸೆಗಳನ್ನು ಓದಿದ ನಡ್ಡಾ, “ದೆಹಲಿ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದವರು ಹಾಗೂ 2026ರ ಜುಲೈ 20ರಂದು ಸಂಸತ್ ಮೆರವಣಿಗೆಯಲ್ಲಿ ಭಾಗವಹಿಸಿದವರ ವಿರುದ್ಧ ಪ್ರಕರಣ ದಾಖಲಿಸದಿರುವ ಕುರಿತು ಸರ್ಕಾರ ಸಕಾರಾತ್ಮಕ ನಿಲುವು ಹೊಂದಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆ ಹಾಗೂ ಪರೀಕ್ಷಾ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ಸರ್ಕಾರ ಈಗಾಗಲೇ ಭರವಸೆ ನೀಡಿದೆ. ಇತ್ತೀಚಿನ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ವಿಚಾರವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ” ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ವಾಂಗ್ಚುಕ್, ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರ ಕೈ ಹಿಡಿದು, “ಉಪವಾಸ ಅಂತ್ಯಗೊಳಿಸಲು ಸಂತೋಷವಾಗುತ್ತಿದೆ. ಸರ್ಕಾರಕ್ಕೆ ನಾನು ಕೃತಜ್ಞನಾಗಿದ್ದೇನೆ. ಧನ್ಯವಾದಗಳು” ಎಂದು ಹೇಳಿದರು.
ಇದೇ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಅವರು, “ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದು ನ್ಯಾಯಸಮ್ಮತ. ಆದರೆ ಯಾವುದೇ ರೀತಿಯ ಹಿಂಸೆಯನ್ನು ನಾನು ಬೆಂಬಲಿಸುವುದಿಲ್ಲ. ಸಮಾಜವಿರೋಧಿ ಶಕ್ತಿಗಳು ಈ ಹೋರಾಟದ ಲಾಭ ಪಡೆಯಲು ಅವಕಾಶ ನೀಡಬಾರದು. ವಿದ್ಯಾರ್ಥಿಗಳು ಶಾಂತಿಯನ್ನು ಕಾಪಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ತಮ್ಮ ಪತ್ನಿ ಗೀತಾಂಜಲಿ ಆಂಗ್ಮೋ  ಸದಾ ನನ್ನ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ಕೇವಲ ಧನ್ಯವಾದ ಹೇಳುವುದಕ್ಕಿಂತ ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದು ಹೇಳಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಾಂಗ್ಚುಕ್ ಅವರು ಜೂನ್ 28ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟಿರುವುದಾಗಿ ವೈದ್ಯರು ಎಚ್ಚರಿಕೆ ನೀಡಿದ ನಂತರ ಜುಲೈ 18ರಂದು ಅವರನ್ನು ಪ್ರತಿಭಟನಾ ಸ್ಥಳದಿಂದ ಸ್ಥಳಾಂತರಿಸಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸರ್ಕಾರಿ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಅವರ ಪತ್ನಿ ಗೀತಾಂಜಲಿ ಆಂಗ್ಮೋ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಎರಡು ದಿನಗಳ ವಿಚಾರಣೆಯ ಬಳಿಕ ವಾಂಗ್ಚುಕ್ ಅವರನ್ನು ಗುರುಗ್ರಾಮದ ಮೆದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ನ್ಯಾಯಾಲಯ ಅನುಮತಿ ನೀಡಿತ್ತು. ಅಲ್ಲಿಯೇ ಅವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement