ಬಾಗಲಕೋಟೆ: ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದ ಹಿನ್ನೆಲೆಯಲ್ಲಿ 23 ವರ್ಷದ ಮಹಿಳೆಯನ್ನು ಪತಿಯೇ ನೇಣು ಬಿಗಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಮೃತ ಮಹಿಳೆಯನ್ನು ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಪ್ರವೀಣ ಜಿಗಳೂರು ಎಂದು ಗುರುತಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಪ್ರವೀಣ ತನ್ನ ಪತ್ನಿ ಭಾಗ್ಯಶ್ರೀ ಮೇಲೆ ಮೊದಲು ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಮನೆಯಲ್ಲೇ ಹಸಿರು ಬಣ್ಣದ ದುಪ್ಪಟ್ಟಾವನ್ನು ಬಳಸಿ ನೇಣು ಬಿಗಿದು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.
ಘಟನೆಯ ಬಳಿಕವೂ ಆರೋಪಿಯ ಕ್ರೌರ್ಯ ನಿಲ್ಲಲಿಲ್ಲ. ನೇಣು ಬಿಗಿದ ಬಳಿಕ ದೃಶ್ಯಗಳನ್ನು ಆತ ತನ್ನ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಭಾಗ್ಯಶ್ರೀ ಉಸಿರುಗಟ್ಟಿದ ಸ್ಥಿತಿಯಲ್ಲಿದ್ದಾಗ ಆ ವೇಳೆ ಆಕೆಯ ಪೋಷಕರಿಗೆ ವಿಡಿಯೋ ಕರೆ ಮಾಡಿ ತಮ್ಮ ಮಗಳ ಅಸಹಾಯಕ ಸ್ಥಿತಿಯನ್ನು ತೋರಿಸಿದ್ದಾನೆ ಎನ್ನಲಾಗಿದೆ. ನಂತರ ಆ ವಿಡಿಯೋವನ್ನು ತನ್ನ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ದಂಪತಿ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಭಾಗ್ಯಶ್ರೀ ಸುಮಾರು ಎರಡು ತಿಂಗಳ ಹಿಂದೆ ಪತಿಯ ಮನೆಯನ್ನು ತೊರೆದು ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದರು. ಬಳಿಕ ಶಾಂತಿಯುತವಾಗಿ ಸಹಬಾಳ್ವೆ ನಡೆಸುವುದಾಗಿ ಭರವಸೆ ನೀಡಿದ ಪ್ರವೀಣ, ಭಾಗ್ಯಶ್ರೀಯನ್ನು ಮರಳಿ ಮನೆಗೆ ಕರೆತಂದಿದ್ದ. ಆದರೆ, ಮನೆಗೆ ಹಿಂದಿರುಗಿದ ದಿನ ಸಂಜೆಯೇ ಆಕೆಯನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.
ಮಾಹಿತಿ ತಿಳಿದ ಕೂಡಲೇ ಬಿಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.ಈ ಹತ್ಯೆಗೆ ಕಾರಣವಾದ ಘಟನೆಗಳ ಸಂಪೂರ್ಣ ಹಿನ್ನೆಲೆಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣದ ಎಲ್ಲ ಆಯಾಮಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ