ಮತದಾರರ ಪಟ್ಟಿಯಲ್ಲಿ ಬಾಂಗ್ಲಾದೇಶಿಗರ ಹೆಸರು ಸೇರಿಸಲು ನಿರಾಕರಿಸಿದ್ದಕ್ಕೆ ಬೆಂಗಳೂರಲ್ಲಿ ಅಧಿಕಾರಿ ಮೇಲೆ ಹಲ್ಲೆ ; ಬಿಜೆಪಿ ಆರೋಪ

ಬೆಂಗಳೂರು : ಬೆಂಗಳೂರಿನಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯದಲ್ಲಿ ನಿರತರಾಗಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಸುಮಾರು ಎಂಟು ಮಂದಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
“ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳನ್ನು ಮತದಾರರ ಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕಾಗಿ” ಈ ಹಲ್ಲೆ ನಡೆದಿದ್ದು, ಈ ಸಂಬಂಧ ಬಿಜೆಪಿ ಹಿರಿಯ ನಾಯಕ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ ಗಂಭೀರ ಆರೋಪ ಮಾಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಎಸ್. ಹರೀಶ ಆಗ್ರಹಿಸಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳಿಗೆ ಕೂಡಲೇ ಸೂಕ್ತ ಭದ್ರತೆ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ 10 ಮತಗಟ್ಟೆಗಳಲ್ಲಿ ಎಸ್‌ಐಆರ್ ಕಾರ್ಯದ ಮೇಲ್ವಿಚಾರಣೆ ನಡೆಸುತ್ತಿದ್ದ ಸೂಪರಿಂಟೆಂಡೆಂಟ್ ಹುದ್ದೆಯ ಅಧಿಕಾರಿ ಫಕೀರಪ್ಪ ಅವರ ಮೇಲೆ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದರು.

“ಫಕೀರಪ್ಪ ಅವರನ್ನು ರಸ್ತೆಯಲ್ಲಿ ಎಳೆದಾಡಿ ಅಮಾನುಷವಾಗಿ ಹಲ್ಲೆ ಮಾಡಲಾಗಿದೆ. ಸುಮಾರು ಏಳು-ಎಂಟು ಮಂದಿ ಅವರನ್ನು ಸುತ್ತುವರಿದು ಹಲ್ಲೆ ನಡೆಸಿದ್ದಾರೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳನ್ನು ಮತದಾರರ ಪಟ್ಟಿಗೆ ಸೇರಿಸುವಂತೆ ಒತ್ತಡ ಹೇರಿದಾಗ, ‘ಅವರು ಅಕ್ರಮ ನುಸುಳುಕೋರರು. ಅವರ ಬಳಿ ಯಾವುದೇ ಮಾನ್ಯ ದಾಖಲೆಗಳಿಲ್ಲ. ಅವರನ್ನು ಮತದಾರರ ಪಟ್ಟಿಗೆ ಸೇರಿಸಲು ಸಾಧ್ಯವಿಲ್ಲ’ ಎಂದು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಅವರ ಮೇಲೆ ಹಲ್ಲೆ ನಡೆದಿದೆ” ಎಂದು ಹರೀಶ ಆರೋಪಿಸಿದರು.
ಹಲ್ಲೆಯಿಂದ ಫಕೀರಪ್ಪ ಅವರ ಹಲ್ಲುಗಳು ಹಾನಿಗೊಳಗಾಗಿದ್ದು, ತುಟಿಗಳಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನವೂ ನಡೆದಿದೆ ಎಂದು ಅವರು ಆರೋಪಿಸಿದರು.”ಅವರನ್ನು ಎಷ್ಟರ ಮಟ್ಟಿಗೆ ಥಳಿಸಲಾಗಿದೆ ಎಂದರೆ ಹಲ್ಲುಗಳು ಮುರಿದಿವೆ, ತುಟಿಗಳು ಹರಿದಿವೆ. ಅವರು ಈಗ ಅಷ್ಟರ ಮಟ್ಟಿಗೆ ಭಯಗೊಂಡಿದ್ದು, ಈ ಘಟನೆ ಬಗ್ಗೆ ಮಾತನಾಡಲೂ ಸಿದ್ಧರಿಲ್ಲ” ಎಂದು ಹೇಳಿದರು. ಸ್ಥಳೀಯ ಕೆಲವರು ಹಾಗೂ ಸ್ಥಳೀಯ ಶಾಸಕ ಅಧಿಕಾರಿಯ ಮೇಲೆ ಒತ್ತಡ ಹೇರಿದ್ದರು ಎಂದು ಕೂಡ ಹರೀಶ ಆರೋಪಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆಯ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರನ್ನು ಬಂಧಿಸಲಾಗಿದ್ದರೂ, ದಾಳಿಯಲ್ಲಿ ಭಾಗಿಯಾಗಿದ್ದ ಇನ್ನೂ ಹಲವರನ್ನು ಪೊಲೀಸರು ಬಂಧಿಸಿಲ್ಲ ಎಂದು ಅವರು ದೂರಿದರು. ಇದೇ ವೇಳೆ, ಈ ಹಲ್ಲೆ ನಡೆಸಿದವರು 2020ರ ಡಿ.ಜೆ. ಹಳ್ಳಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ ಹರೀಶ, ಅಂತಹವರ ವಿರುದ್ಧ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದರು.
“ಇಂದು ಪ್ರಿಯಾಂಕ್ ಖರ್ಗೆ ಅವರ ಗೃಹ ಇಲಾಖೆಯ ಆಡಳಿತದಲ್ಲಿ, ಹಗಲು ಹೊತ್ತಲ್ಲೇ ಸರ್ಕಾರಿ ಅಧಿಕಾರಿಗಳ ಮೇಲೆ ರಸ್ತೆಯ ಮಧ್ಯೆ ಹಲ್ಲೆ ನಡೆಯುತ್ತಿದೆ. ಹಾಗಾದರೆ ಈ ಸರ್ಕಾರ ಯಾರನ್ನು ರಕ್ಷಿಸಲು ಮುಂದಾಗಿದೆ?” ಎಂದು ಪ್ರಶ್ನಿಸಿದರು.
ಕೇಂದ್ರದ ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿರೋಧ ಪಕ್ಷಗಳು ರಾಜೀನಾಮೆ ಕೇಳಿದ್ದನ್ನು ಉಲ್ಲೇಖಿಸಿದ ಅವರು, “ಅಂದು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳಿದ್ದರು. ಇಂದು ನಮ್ಮ ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಯುತ್ತಿದೆ. ಆದ್ದರಿಂದ ಪ್ರಿಯಾಂಕ್ ಖರ್ಗೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳ ಸುರಕ್ಷತೆ ಗಂಭೀರ ಪ್ರಶ್ನೆಯಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ತಕ್ಷಣ ಬಂಧಿಸಬೇಕು, ಅಧಿಕಾರಿಗಳಿಗೆ ಅಗತ್ಯ ಭದ್ರತೆ ಒದಗಿಸಬೇಕು ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂಬ ಹರೀಶ ಒತ್ತಾಯಿಸಿದರು.

ಪ್ರಮುಖ ಸುದ್ದಿ :-   ಕಾವೇರಿ ವಿವಾದ: ಕರ್ನಾಟಕದ ಮನವಿ ತಿರಸ್ಕರಿಸಿದ ಸಿಡಬ್ಲ್ಯೂಎಂಎ; ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement