ಕಾರವಾರ: ಬೀದಿ ಗೂಳಿಗಳ ಕಾಳಗಕ್ಕೆ ಸಿಲುಕಿ ಅಮಾಯಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಮಲ್ಲಾಪುರ ಗ್ರಾಮದ ನಿವಾಸಿ ರಾಜೇಶ್ವರಿ (29) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಗ್ರಾಮದ ಸುಭದ್ರಾ ಹೋಟೆಲ್ ಸಮೀಪ ರಸ್ತೆಯಲ್ಲಿ ಕಾದಾಡುತ್ತಿದ್ದ ಎರಡು ಗೂಳಿಗಳು ಏಕಾಏಕಿ ರಾಜೇಶ್ವರಿ ಅವರ ಮೇಲೆ ರಭಸವಾಗಿ ಅಪ್ಪಳಿಸಿವೆ. ಗೂಳಿಗಳ ಗುದ್ದಾಟಕ್ಕೆ ಸಿಲುಕಿದ ಅವರು ಆಯತಪ್ಪಿ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣವೇ ರಾಜೇಶ್ವರಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಗಾಯಗಳು ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಬೀದಿ ಗೂಳಿಗಳ ಹಾವಳಿ ನಿಯಂತ್ರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ