ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ವಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ), ಕೆಪಿಎಸ್ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್.ಸಾಹುಕಾರ ಅವರ ಮನೆ ಸೇರಿದಂತೆ 21 ಕಡೆಗಳಲ್ಲಿ ಬೆಂಗಳೂರು ವಲಯದ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಇಂದು, ಮಂಗಳವಾರ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
.ಕೆಪಿಎಸ್ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್.ಸಾಹುಕಾರ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ, ಹಾಗೂ ಇತರ ಕೆಲ ಸ್ಥಳಗಳ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಇದಲ್ಲದೆ ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ. ಹಗರಣದ ಮಧ್ಯವರ್ತಿಗಳು, ಪರೀಕ್ಷಾ ಪತ್ರಿಕೆಗಳ ಡಿಜಿಟಲ್ ಮೌಲ್ಯಮಾಪನದ ಜವಾಬ್ದಾರಿ ಹೊತ್ತಿದ್ದ ‘ಎಡುಟೆಸ್ಟ್ ಸೊಲ್ಯೂಷನ್ಸ್’ ಸಂಸ್ಥೆಯ ಕಚೇರಿ ಹಾಗೂ ಆಯ್ಕೆಯಾದ ಪಶು ವೈದ್ಯಾಧಿಕಾರಿ ಅಭ್ಯರ್ಥಿಗಳ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಗುಜರಾತಿನ ಅಹಮದಾಬಾದ್ನಲ್ಲಿಯೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಪಶು ವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕೆಪಿಎಸ್ಸಿ ಅಧ್ಯಕ್ಷ, ಸದಸ್ಯರ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಒಟ್ಟು 4 ಎಫ್ಐಆರ್ಗಳು ದಾಖಲಾಗಿದ್ದವು. ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರ ಮೇಲೆ ಪರೀಕ್ಷಾ ಪತ್ರಿಕೆ ಸೋರಿಕೆ, ಒಎಂಆರ್ ಹಾಳೆಗಳನ್ನು ತಿರುಚುವುದು ಮತ್ತು ಸರ್ಕಾರಿ ಪಶುವೈದ್ಯಕೀಯ ಅಧಿಕಾರಿಗಳ ನೇಮಕಾತಿಗಾಗಿ ಪ್ರತಿ ಅಭ್ಯರ್ಥಿಗೆ 70 ರಿಂದ 80 ಲಕ್ಷದವರೆಗೆ ಲಂಚ ಕೇಳಿದ ಆರೋಪವಿದೆ.ಖಾಸಗಿ ಕಂಪನಿಯೊಂದು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಇ.ಡಿ.ಯು ಶಿವಶಂಕರಪ್ಪ ಮತ್ತು ಕೆಪಿಎಸ್ಸಿಯ ಕೆಲವು ಮಾಜಿ ಸದಸ್ಯರ ನಿವಾಸ ಮತ್ತು ಖಾಸಗಿ ಕಂಪನಿಗೆ ಸಂಬಂಧಿಸಿದ ಕಚೇರಿಗಳಲ್ಲಿ ಶೋಧ ನಡೆಸಿತು. ತನಿಖೆಯು ಅಕ್ರಮಗಳು ಮತ್ತು ಭ್ರಷ್ಟ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದೆ. ಪ್ರಕರಣದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಕೆಪಿಎಸ್ಸಿ ಅಧಿಕಾರಿಗಳ ಸಂಬಂಧಿಕರಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆದ್ಯತೆ ನೀಡಲಾದ ಗಂಭೀರ ಆರೋಪಗಳ ಕುರಿತಾದ ಹಣಕಾಸು ವ್ಯವಹಾರದ ತನಿಖೆ ಮುಂದುವರೆಸಿರುವುದಾಗಿ ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ