ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂದರ್ಭದಲ್ಲಿ ಐವರು ಸಿಖ್ಖರ ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪುಗೊಂಡು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ ಗುರುವಾರ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ ಆರೋಗ್ಯದಲ್ಲಿ ಹಠಾತ್ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಬೆಳಿಗ್ಗೆ ಸುಮಾರು 11 ಗಂಟೆಗೆ ಪೊಲೀಸರು ವಿಎಂಎಂಸಿ ಮತ್ತು ಸಫ್ದರ್ಜಂಗ್ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ಕರೆತರುವ ವೇಳೆಗೆ ಅದು ಪ್ರಜ್ಞೆಯಿಲ್ಲದ ಬದಲಾಗಿತ್ತು.
ಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಸಜ್ಜನ್ ಕುಮಾರನನ್ನು ತಕ್ಷಣ ದಾಖಲಿಸಿಕೊಂಡು ಪುನಶ್ಚೇತನ ಕ್ರಮಗಳನ್ನು ಕೈಗೊಳ್ಳಲಾಯಿತು. ಅಗತ್ಯವಿರುವ ಎಲ್ಲ ವೈದ್ಯಕೀಯ ಚಿಕಿತ್ಸೆ ಹಾಗೂ ಜೀವಾಧಾರಕ ಕ್ರಮಗಳನ್ನು ಕೈಗೊಂಡರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಧ್ಯಾಹ್ನ 12:30ಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
ಸಜ್ಜನಕುಮಾರಗೆ ಪಾರ್ಕಿನ್ಸನ್ ಕಾಯಿಲೆ ಇತ್ತು. ಅಲ್ಲದೆ, ಈ ಹಿಂದೆ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.
ಮೂರು ಬಾರಿ ಲೋಕಸಭೆ ಸದಸ್ಯರಾಗಿದ್ದ ಕಾಂಗ್ರೆಸ್ ಮಾಜಿ ನಾಯಕ
ಸಜ್ಜನ್ ಕುಮಾರ ದೆಹಲಿಯ ಹೊರ ದೆಹಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಮೂರು ಬಾರಿ ಸಂಸದರಾಗಿದ್ದರು. ಕಾಂಗ್ರೆಸ್ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ಅವರು, 2018ರಲ್ಲಿ ದೋಷಿ ಎಂದು ತೀರ್ಪು ಬಂದ ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
1984ರ ಅಕ್ಟೋಬರ್ 31ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಸಿಖ್ ಅಂಗರಕ್ಷಕರಾದ ಸತ್ವಂತ್ ಸಿಂಗ್ ಮತ್ತು ಬಿಯಂತ್ ಸಿಂಗ್ ಹತ್ಯೆ ಮಾಡಿದ ಬಳಿಕ ದೇಶದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ದೆಹಲಿಯಲ್ಲಿ, ಸಿಖ್ ಸಮುದಾಯದ ವಿರುದ್ಧ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು. ಶಸ್ತ್ರಸಜ್ಜಿತ ಗುಂಪುಗಳು ಸಿಖ್ರನ್ನು ಗುರಿಯಾಗಿಸಿಕೊಂಡು ಅವರ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಿದ್ದವು. ದೇಶಾದ್ಯಂತ 3,000ಕ್ಕೂ ಹೆಚ್ಚು ಸಿಖ್ರು ಹತ್ಯೆಯಾಗಿದ್ದು, ಅವರಲ್ಲಿ ಬಹುತೇಕರು ದೆಹಲಿಯಲ್ಲೇ ಮೃತಪಟ್ಟಿದ್ದರು.
ಮೂರು ದಶಕಗಳಿಗೂ ಹೆಚ್ಚು ಕಾಲ ನಡೆದ ಕಾನೂನು ಹೋರಾಟ
1984ರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಜ್ಜನ್ ಕುಮಾರ್ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಮೂರು ದಶಕಗಳಿಗೂ ಹೆಚ್ಚು ಕಾಲ ನಡೆದ ಕಾನೂನು ಹೋರಾಟದಲ್ಲಿ ವಿವಿಧ ನ್ಯಾಯಾಲಯಗಳ ತೀರ್ಪುಗಳು ಕೆಲವೊಮ್ಮೆ ಅವರನ್ನು ಖುಲಾಸೆಗೊಳಿಸಿದರೆ, ಮತ್ತೊಮ್ಮೆ ದೋಷಿ ಎಂದು ಘೋಷಿಸಿದ್ದವು.
2013ರಲ್ಲಿ ವಿಚಾರಣಾ ನ್ಯಾಯಾಲಯವು ಸಜ್ಜನ್ ಕುಮಾರನನ್ನು ಖುಲಾಸೆಗೊಳಿಸಿತ್ತು. ಆದರೆ 2018ರ ಡಿಸೆಂಬರ್ 17ರಂದು ದೆಹಲಿ ಹೈಕೋರ್ಟ್ ಆ ತೀರ್ಪನ್ನು ತಿರಸ್ಕರಿಸಿ ಅವರನ್ನು ದೋಷಿ ಎಂದು ಘೋಷಿಸಿತು. ಬಳಿಕ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.
ಈ ಪ್ರಕರಣವು ಪಾಲಂ ಕಾಲೊನಿಯ ರಾಜ್ ನಗರ ಪಾರ್ಟ್–1 ಪ್ರದೇಶದಲ್ಲಿ ಐವರು ಸಿಖ್ ಪುರುಷರ ಹತ್ಯೆ ಹಾಗೂ ಗುರುದ್ವಾರವೊಂದಕ್ಕೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿತ್ತು. ಸಜ್ಜನ್ ಕುಮಾರ ತಮ್ಮ ವಿರುದ್ಧದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಆ ಅರ್ಜಿ ಇನ್ನೂ ಬಾಕಿಯಿದೆ.
1984ರ ಸಿಖ್ ವಿರೋಧಿ ದಂಗೆ ಪ್ರಕರಣಗಳಲ್ಲಿ ಹಲವು ವರ್ಷಗಳ ಕಾಲ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟ ನಡೆಸಿದ್ದ ಸಜ್ಜನ್ ಕುಮಾರ್, ತಮ್ಮ ವಿರುದ್ಧದ ಪ್ರಮುಖ ಜೀವಾವಧಿ ಶಿಕ್ಷೆ ಜಾರಿಯಲ್ಲಿರುವಾಗಲೇ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ