ಬೆಂಗಳೂರು : ಓವರ್‌ಟೇಕ್‌ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ನಟ ದುನಿಯಾ ವಿಜಯ ಪುತ್ರನ ವಿರುದ್ಧ ದೂರು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ ಅವರ ಪುತ್ರ ಸಾಮ್ರಾಟ ವಿರುದ್ಧ ಸಹಪಾಠಿಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಓವರ್‌ಟೇಕ್‌ ಮಾಡಿದ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಪ್ರಕಾರ, ಸಾಮ್ರಾಟ ಹಾಗೂ ಅವರ ಸ್ನೇಹಿತರು ಜಿಪ್ಸಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಆರ್‌.ಆರ್‌.ನಗರದ ಸಮೀಪ ಮನೀಶ ಗೌಡ ಹಾಗೂ ಅವರ ಸ್ನೇಹಿತರು ಪ್ರಯಾಣಿಸುತ್ತಿದ್ದ ಐ20 ಕಾರು ಇವರನ್ನು ಓವರ್‌ಟೇಕ್ ಮಾಡಿತ್ತು. ಇದೇ ವಿಚಾರವನ್ನು ಮನಸ್ಸಿಗೆ ತೆಗೆದುಕೊಂಡು ಬಳಿಕ ಸಾಮ್ರಾಟ ಮತ್ತು ಅವರ ಸ್ನೇಹಿತರು ಮನೀಶ ಅವರನ್ನು ಹುಡುಕಿಕೊಂಡು ಬಂದಿದ್ದಾರೆ ಎನ್ನಲಾಗಿದೆ. ಮೈಸೂರು ರಸ್ತೆಯಲ್ಲಿರುವ ಆರ್‌ವಿ ವಿಶ್ವವಿದ್ಯಾಲಯದ ಹೊರಭಾಗದಲ್ಲಿ ನಿಂತಿದ್ದ ಮನೀಶ ಅವರನ್ನು ಸಾಮ್ರಾಟ್ ಮತ್ತು ಅವರ ಸ್ನೇಹಿತರು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಹಲ್ಲೆಯಿಂದ ಗಾಯಗೊಂಡಿರುವ ಮನೀಶ ಗೌಡ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮನೀಶ ಗೌಡ ಮತ್ತು ಸಾಮ್ರಾಟ ಇಬ್ಬರೂ ಆರ್‌ವಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದು, ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವುದಾಗಿ ತಿಳಿದುಬಂದಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ದಕ್ಷಿಣ–ಪಶ್ಚಿಮ ವಿಭಾಗದ ಡಿಸಿಪಿ, “ನಮಗೆ ದೂರು ಬಂದಿದೆ. ನಿಖರವಾಗಿ ಏನಾಗಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಬಳಿಕ ಎಫ್‌ಐಆರ್‌ ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಪ್ರಮುಖ ಸುದ್ದಿ :-   ಗೋಕರ್ಣ ಕಡಲ ತೀರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement