ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ (Gas Cylinder Blast) ಗಾಯಗೊಂಡಿದ್ದ ಮತ್ತೊಬ್ಬರು ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದು, ಈ ಘಟನೆಯಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದೆ.
ಸಿಲಿಂಡರ್ ಸ್ಫೋಟದಿಂದ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರೇ ಮೃತಪಟ್ಟಿದ್ದರು. ಮಂಗಳವಾರ ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.
ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27) ಮೃತಪಟ್ಟಿದ್ದರು. ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 9 ಗಾಯಾಳುಗಳ ಪೈಕಿ ಕಿಮ್ಸ್ನಲ್ಲಿ ಓರ್ವ ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದೆ.
ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿದೆ. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗಿಲ್ಲ. ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ