ಅಕ್ರಮ ಆಸ್ತಿ ಗಳಿಕೆ ಆರೋಪ : ರಾಜ್ಯದ ಹಲವೆಡೆ ಲೋಕಾಯಕ್ತ ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಅಧಿಕಾರಿಗಳ ಮನೆ ಹಾಗೂ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಕೊಪ್ಪಳ, ಚಿತ್ರದುರ್ಗ, ಬೀದರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗಳು ದಾಳಿ ನಡೆಸಿದ್ದಾರೆ.ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಮಹದೇವಪುರ ವಲಯದ ಬಿಬಿಎಂಪಿ ಅಧಿಕಾರಿ ನಟರಾಜ ಮನೆ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ನಟರಾಜ ಅವರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ಮನೆ ಮೇಲೆಯೂ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನಟರಾಜ ಅವರು ಈ ಹಿಂದೆ ಕೂಡ ಹಣ ಪಡೆಯುವಾಗ ಟ್ರಾಪ್ ಆಗಿದ್ದರು. ಬೆಂಗಳೂರು ಒಂದರಲ್ಲೇ ಹತ್ತಕ್ಕೂ ಹೆಚ್ಚುಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯಕ್ಕೂ ಮೀರಿ ಆಸ್ತಿ ಆರೋಪ ಹಿನ್ನೆಲೆ ಕೊಡುಗು ಎಡಿಸಿ ನಂಜುಂಡೇಗೌಡ ಅವರ ಮನೆ ಮೇಲೆಯೂ ಗುರುವಾರ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಕೊಡಗು ಮತ್ತು ಮೈಸೂರು ಜಿಲ್ಲೆ ಲೋಕಾಯುಕ್ತ ಪೊಲೀಸರ ಜಂಟಿ ಕಾರ್ಯಾಚರಣೆ ಡಿವೈಎಸ್‌ಪಿ ಪವನ್ ಕುಮಾರ ನೇತೃತ್ವದಲ್ಲಿ ಮೂವರು ಇನ್ಸ್‌ಪೆಕ್ಟರ್ ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ದಾಳಿ ನಡೆದಿದೆ.
ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನಲೆ ಕೊಪ್ಪಳ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ ಬನ್ನಿಕೊಪ್ಪ ಅವರ ನಿರ್ಮಿತಿ ಕೇಂದ್ರ, ಮನೆ, ಹುಲಗಿಯಲ್ಲಿನ ಲಾಡ್ಜ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಮಂಗಲಾ ಆಸ್ಪತ್ರೆ ಹಿಂಭಾಗದದಲ್ಲಿರುವ ಮನೆ ಮೇಲೆಯೂ ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಬೀದರ ಜಿಲ್ಲೆಯ ಕಾನ್‌ಸ್ಟೇಬಲ್ ವಿಜಯಕುಮಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಚಿಟಗುಪ್ಪ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಜಯಕುಮಾರ್ ಅಕ್ರಮದ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಹುಮ್ನಾಬಾದ ಪಟ್ಟಣದ ಟೀಚರ್ ಕಾಲೋನಿ, ಹುಚಕನಳ್ಳಿ ಗ್ರಾಮದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶಿಲನೆ ನಡೆಸಿದ್ದಾರೆ.

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಕೆ ಮಹೇಶ ಹಾಗೂ ಪತ್ನಿ ಭಾರತಿ ಅವರ ಮನೆ ಮೇಲೆ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಮನೆ ಮೇಲೆ ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಿರುವ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ತುಮಕೂರಿನ ಸಪ್ತಗಿರಿ ಬಡಾವಣೆಯಲ್ಲಿರುವ ಮನೆ ಹಾಗೂ ಟೂಡಾ ಕಚೇರಿ ಮೇಲೆ ಹಾಗೂ ಅರಸಿಕೆರೆಯ ನಿವಾಸದ ಮೇಲೆ, ಒಟ್ಟು ಮೂರು ಕಡೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement