ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಪಕ್ಷದ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ್ದು ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಒಬ್ಬರೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವುದಿಲ್ಲ ಎಂದು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವರು ಪತ್ರ ಬರೆದಿದ್ದಾರೆ.
“ಮಹಾರಾಷ್ಟ್ರದ ಒಟ್ಟು 48 ಲೋಕಸಭಾ ಸ್ಥಾನಗಳಲ್ಲಿ, ಮಹಾ ವಿಕಾಸ್ ಅಘಾಡಿ (MVA) ಮಹಾರಾಷ್ಟ್ರದಲ್ಲಿ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್ ನೀಡಿಲ್ಲ” ಎಂದು ಮಾಜಿ ಸಚಿವ ಆರಿಫ್ ನಸೀಮ್ ಖಾನ್ ಅವರು ಪತ್ರದಲ್ಲಿ ಬರೆದಿದ್ದಾರೆ.
ಮಹಾರಾಷ್ಟ್ರದಾದ್ಯಂತ ಅನೇಕ ಮುಸ್ಲಿಂ ಸಂಘಟನೆಗಳು, ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಅಲ್ಪಸಂಖ್ಯಾತ ಸಮುದಾಯದಿಂದ ಕನಿಷ್ಠ ಒಬ್ಬ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತದೆ ಎಂದು ನಿರೀಕ್ಷಿಸಿದ್ದರು, ಆದರೆ ದುರದೃಷ್ಟವಶಾತ್ ಇದು ನಡೆಯಲಿಲ್ಲ ಎಂದು ಅವರು ಹೇಳಿದ್ದಾರೆ.
ಈಗ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ತಮ್ಮನ್ನು “ಕಾಂಗ್ರೆಸ್ ಕೋ ಮುಸ್ಲಿಂ ವೋಟ್ ಚಾಹಿಯೇ, ಲೇಕಿನ್ ಕ್ಯಾಂಡಿಡೇಟ್ ಕ್ಯೂಂ ನಹೀ (ಕಾಂಗ್ರೆಸ್ಗೆ ಮುಸ್ಲಿಂ ಮತಗಳು ಬೇಕು, ಆದರೆ ಅಭ್ಯರ್ಥಿಗಳು ಏಕೆ ಬೇಡ) ಎಂದು ಕೇಳುತ್ತಿದ್ದಾರೆ ಎಂದು 60 ವರ್ಷದ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಪ್ರಶ್ನಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ, ನನಗೆ ಮುಸಲಿಮ ಸಮಾಜದವರನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಮತ್ತು ನನ್ನ ಬಳಿ ಇದಕ್ಕೆ ಉತ್ತರವಿಲ್ಲ” ಎಂದು ಖಾನ್ ಪತ್ರದಲ್ಲಿ ಬರೆದಿದ್ದಾರೆ.
ಮಹಾರಾಷ್ಟ್ರ ಕಾಂಗ್ರೆಸ್ ಪ್ರಚಾರ ಸಮಿತಿಗೆ ರಾಜೀನಾಮೆ ನೀಡುವುದಾಗಿಯೂ ಖಾನ್ ಹೇಳಿದ್ದಾರೆ.
ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳಲ್ಲಿ ಶಿವಸೇನೆ (ಯುಬಿಟಿ) ಮತ್ತು ಎನ್ಸಿಪಿ (ಶರದ್ಚಂದ್ರ ಪವಾರ್) ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ 17ರಲ್ಲಿ ಸ್ಪರ್ಧಿಸುತ್ತಿದೆ. ಅವರು ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (MVA) ಮೈತ್ರಿಕೂಟದ ಘಟಕಗಳಾಗಿವೆ.
ಮೊಹಮ್ಮದ್ ಆರಿಫ್ ಖಾನ್ ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷವು ನಗರ ಘಟಕದ ಅಧ್ಯಕ್ಷೆ ವರ್ಷಾ ಗಾಯಕ್ವಾಡ್ ಅವರನ್ನು ಈ ಕ್ಷೇತ್ರಕ್ಕೆ ಆಯ್ಕೆ ಮಾಡಿದೆ. ಅವರು 2019 ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ ಚಂಡಿವಾಲಿಯಿಂದ ಸ್ಪರ್ಧಿಸಿದ್ದರು, ಅಲ್ಲಿ ಅವರು 409 ಮತಗಳಿಂದ ಸೋತರು.
ನಿಮ್ಮ ಕಾಮೆಂಟ್ ಬರೆಯಿರಿ