ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡಿನ ದಾಳಿಗೆ 60 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಗುರುವಾರ (ಜುಲೈ 17) ಬೆಳಿಗ್ಗೆ 11 ಗಂಟೆ ಸುಮಾರಿಗೆ ಗ್ರಾಮದ ಗೇರು ಪ್ಲಾಂಟೇಶನ್ಗೆ ಎರಡು ಆನೆಗಳು ಬಂದಿದ್ದನ್ನು ತಿಳಿದು ಅವುಗಳನ್ನು ಓಡಿಸಲು ಪ್ರಯತ್ನಿಸಿದಾಗ ಈ ದುರದೃಷ್ಟಕರ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಕಾಡಾನೆಯೊಂದು ಒಮ್ಮೆಲೇ ದಾಳಿ ಮಾಡಿ ಸೊಂಡಿಲಿನಿಂದ ತಿವಿದಿದೆ ಎನ್ನಲಾಗಿದೆ. ಮೃತರು ಸೌತಡ್ಕ ನಿವಾಸಿ ಬಾಲಕೃಷ್ಣ ಎಂದು ತಿಳಿದುಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆ, ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯ ಗ್ರಾಮ ಪಂಚಾಯತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ