ಮುಂಬೈ: ತೀವ್ರ ವೈರಲ್ ಸೋಂಕಿನಿಂದ ಬಳಲುತ್ತಿರುವ ಸಾಮಾಜಿಕ ಕಾರ್ಯಕರ್ತ, ಭ್ರಷ್ಟಾಚಾರದ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ (Anna Hazare) ಅವರನ್ನು ಸೋಮವಾರ ಮುಂಬೈನ ಬಾಂಬೆ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಹಜಾರೆ ಅವರು ಪ್ರಸ್ತುತ ಗೌತಮ್ ಬನ್ಸಾಲಿ ಅವರ ನಿರಂತರ ನಿಗಾದಲ್ಲಿದ್ದಾರೆ. ವೈದ್ಯಕೀಯ ತಜ್ಞರು ವಿವರವಾದ ರೋಗನಿರ್ಣಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ ಮತ್ತು ವರದಿಗಳ ಆಧಾರದ ಮೇಲೆ ಚಿಕಿತ್ಸೆಯ ಯೋಜನೆಯನ್ನು ನಿರ್ಧರಿಸಲಾಗುತ್ತದೆ.
ನಿರ್ಜಲೀಕರಣ (dehydration), ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು, ವೈದ್ಯರುತೀವ್ರ ನಿಗಾ ಇಟ್ಟಿದ್ದಾರೆ. 87 ವರ್ಷದ ಅಣ್ಣಾ ಹಜಾರೆ ತಮ್ಮ ಊರಾದ ರಾಲೇಗಾನ್ ಸಿದ್ಧಿ ಗ್ರಾಮದ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿರುವ ಅಣ್ಣಾ ಹಜಾರೆ ಜಲಾನಯನ ಅಭಿವೃದ್ಧಿ, ಅರಣ್ಯೀಕರಣ, ಗ್ರಾಮೀಣ ಸ್ವಾವಲಂಬನೆ ಮತ್ತು ವ್ಯಸನ ನಿರ್ಮೂಲನೆಯಲ್ಲಿ ಹಲವು ಕ್ರಮಗಳನ್ನು ಆಡಳಿತ ಕೈಗೊಳ್ಳುವಂತೆ ಮಾಡಿ ಮಹಾರಾಷ್ಟ್ರದ ರಾಲೆಗಾನ್ ಸಿದ್ಧಿಯನ್ನು ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಪರಿವರ್ತಿಸಿದ್ದರು.
ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆ ಮತ್ತು ಜನ ಲೋಕಪಾಲ್ ಮಸೂದೆ ಅನುಷ್ಠಾನಕ್ಕಾಗಿ ಉಪವಾಸ ಸತ್ಯಾಗ್ರಹ ಮತ್ತು ನಿರಂತರ ಚಳುವಳಿಗಳನ್ನು ನಡೆಸಿದ್ದರು. ಸಮಾಜ ಮತ್ತು ಗ್ರಾಮೀಣ ಅಭಿವೃದ್ಧಿಗೆ ಅವರ ಸೇವೆಯನ್ನು ಗುರುತಿಸಿ, ಭಾರತ ಸರ್ಕಾರವು 1992ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಮಹಾರಾಷ್ಟ್ರ ಭೂಷಣ ಸೇರಿದಂತೆ ಹಲವಾರು ಪುರಸ್ಕಾರಗಳು ಅವರಿಗೆ ಲಭ್ಯವಾಗಿವೆ.
ಕಳೆದ ಜುಲೈ ತಿಂಗಳಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ ದೆಹಲಿ ಪ್ರತಿಭಟನೆ ಕುರಿತು ವಿದ್ಯಾರ್ಥಿಗಳನ್ನು ಬೆಂಬಲಿಸಿ ಅಣ್ಣಾ ಹಜಾರೆ ಅವರು ಕೂಡ ಹೇಳಿಕೆಯನ್ನು ನೀಡಿದ್ದರು. ಯುವಕರು ಮತ್ತು ವಿದ್ಯಾರ್ಥಿಗಳು ದೇಶದ ಪ್ರಮುಖ ಶಕ್ತಿಯನ್ನು ಪ್ರತಿನಿಧಿಸುತ್ತಾರೆ ಮತ್ತು ಕೆಳ ಹಂತದ ಅಧಿಕಾರಿಗಳ ಮೇಲೆ ಆರೋಪ ಹೊರಿಸುವ ಬದಲು ಹಿರಿಯ ನಾಯಕತ್ವದ ಮೇಲೆ ಜವಾಬ್ದಾರಿ ಇರಬೇಕು ಎಂದು ಹೇಳಿದ್ದರು.
ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಅವರು, ಪ್ರಮುಖ ಸಾರ್ವಜನಿಕ ಸಮಸ್ಯೆಗೆ ಸಚಿವರ ರಾಜೀನಾಮೆಯನ್ನು ಅಂಗೀಕರಿಸುವುದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ಬಲಪಡಿಸುತ್ತದೆ ಮತ್ತು ಸರ್ಕಾರಿ ಇಲಾಖೆಗಳಲ್ಲಿ ಬಲವಾದ ಸಂದೇಶವನ್ನು ರವಾನಿಸುತ್ತದೆ ಎಂದು ಪ್ರತಿಪಾದಿಸಿದ್ದರು.
ಅಹಲ್ಯಾನಗರದಲ್ಲಿ ಮೌನ ಉಪವಾಸ ನಡೆಸಿದ್ದ ಅವರು ದೆಹಲಿಯಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಬಲಪ್ರಯೋಗ ಮತ್ತು ಲಾಠಿ ಚಾರ್ಜ್ ಮಾಡುವುದನ್ನು ಖಂಡಿಸಿದ್ದರು. ಪ್ರಜಾಪ್ರಭುತ್ವದಲ್ಲಿ ಮಾತುಕತೆಗಳೇ ಉತ್ತಮ. ಸಾರ್ವಜನಿಕ ಕುಂದುಕೊರತೆಗಳನ್ನು ಬಲಪ್ರಯೋಗಕ್ಕಿಂತ ಹೆಚ್ಚಾಗಿ ಅಹಿಂಸಾತ್ಮಕ ಚರ್ಚೆಯ ಮೂಲಕ ಪರಿಹರಿಸಬೇಕು ಎಂದು ತಿಳಿಸಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ