ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್‌ ಸಲ್ಲಿಕೆ

ಬೆಂಗಳೂರು: ರಾಜಕೀಯವಾಗಿ ಕೋಲಾಹಲ ಸೃಷ್ಟಿಸಿದ್ದ ಬೆಳಗಾವಿ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ “ಬಿʼ ರಿಪೋರ್ಟ್‌ ಸಲ್ಲಿಸಲಾಗಿದೆ.
ತನಿಖೆ ನಡೆಸಿದ ಪೊಲೀಸರು ಜನಪ್ರತಿನಿಧಿಗಳ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ಈಶ್ವರಪ್ಪ-ಸಂತೋಷ್ ಮುಖಾಮುಖಿ ಭೇಟಿಯಾಗಿರಲಿಲ್ಲ ಎಂದು ಬಿ ರಿಪೋರ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಏಪ್ರಿಲ್​ 11ರಂದು ಉಡುಪಿಯ ಲಾಡ್ಜ್​ನಲ್ಲಿ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲ ದಿನಗಳ ಮೊದಲು ಗುತ್ತಿಗೆದಾರ ಸಂತೋಷ ಪಾಟೀಲ ಸಚಿವ ಈಶ್ವರಪ್ಪ ಅವರ ಮೇಲೆ 40% ಕಮಿಷನ್ ಆರೋಪ ಮಾಡಿದ್ದರು.ನಂತರ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆಗೆ ಶರಣಾಗುವ ಮುನ್ನ ಸಂತೋಷ ಪಾಟೀಲ ಅವರು, ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್‌ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತು. ಸಂತೋಷ್​ ಅವರ ಸಹೋದರ ಪ್ರಶಾಂತ್​ ಅವರು ಈಶ್ವರಪ್ಪ ವಿರುದ್ಧ ದೂರು ಸಲ್ಲಿಸಿದ್ದರು. ಇದು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿ ನಂತರ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇತ್ತೀಚಿಗಷ್ಟೇ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಸಂತೋಷ್ ಪಾಟೀಲರ ಪತ್ನಿ, ಈಶ್ವರಪ್ಪ ಪ್ರಭಾವದ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸುತ್ತಿದ್ದಾರೆ. ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದರು.

ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ಇದರ ಅನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇದೀಗ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ. ಇದರಲ್ಲಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್​ಚಿಟ್​ ನೀಡಲಾಗಿದೆ. ಕೊಲೆ ಅಥವಾ ಕೊಲೆ ಪ್ರಚೋದನೆ ಎಂಬುದಕ್ಕೆ ಸೂಕ್ತ ಸಾಕ್ಷಿಗಳು ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ವಾಟ್ಸಪ್ ಚಾಟ್, ಆಡಿಯೋ ಸೇರಿ ಯಾವುದೇ ತಾಂತ್ರಿಕ ದಾಖಲೆಗಳು ಪತ್ತೆ ಆಗಿಲ್ಲ ಎಂದು ಬಿ ರಿಪೋರ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಎಲ್ಲಾ ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಕೋರ್ಟ್​ಗೆ ಸಲ್ಲಿಕೆ ಮಾಡಲಾಗಿದೆ. ಸಿಸಿಟಿವಿ ಫುಟೇಜ್​, ವೀಡಿಯೋ, ಆಡಿಯೋ, ಮೊಬೈಲ್ ಸಂದೇಶಗಳ ಜತೆಗೆ ಬ್ಯಾಂಕ್ ದಾಖಲೆ, ಗುತ್ತಿಗೆ ವಿವರ, ಕುಟುಂಬಸ್ಥರು, ಸ್ನೇಹಿತರ ಹೇಳಿಕೆಗಳ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ಕೋರ್ಟ್​ಗೆ ನೀಡಲಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement