ಇ.ಡಿ. ಸಮನ್ಸ್‌ ನೀಡಿದರೆ ಹಾಜರಾಗಬೇಕು : ಸುಪ್ರೀಂ ಕೋರ್ಟ್

ನವದೆಹಲಿ : ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಸಮನ್ಸ್ ಪಡೆದ ವ್ಯಕ್ತಿ ತನಿಖೆ ವೇಳೆ ಜಾರಿ ನಿರ್ದೇಶನಾಲಯ (ಇ.ಡಿ.) ಹೊರಡಿಸಿದ ಸಮನ್ಸ್‌ಗಳನ್ನು ಗೌರವಿಸಿ ಅವುಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.
ಪಿಎಂಎಲ್ಎಯ ಸೆಕ್ಷನ್ 50 ರ ಪ್ರಕಾರ, ತನಿಖೆಯ ಅಗತ್ಯವಿದೆ ಎಂದು ಪರಿಗಣಿಸುವ ಯಾವುದೇ ವ್ಯಕ್ತಿಯ ಸಾಕ್ಷ್ಯ ಪಡೆಯಲು ಅಥವಾ ಕಾಯಿದೆಯಡಿ ಯಾವುದೇ ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ದಾಖಲೆ ಹಾಜರುಪಡಿಸಲು ಸಮನ್ಸ್ ನೀಡುವ ಅಧಿಕಾರ ಇ.ಡಿ. ಅಧಿಕಾರಿಗಳಿಗೆ ಇದೆ ಎಂದು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ ಮಿತ್ತಲ್‌ ಅವರಿದ್ದ ಪೀಠ ಹೇಳಿದೆ.

ತನಿಖೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್‌ ನೀಡಿದರೆ ಅದನ್ನು ಪಡೆದ ವ್ಯಕ್ತಿ ಹಾಜರಾಗಿ ಪಿಎಂಎಲ್ಎ ಅಡಿಯ ತನಿಖೆಗೆ ಅಗತ್ಯವಿದ್ದರೆ ಅಂತಹ ಪುರಾವೆಗಳನ್ನು ಹಾಜರುಪಡಿಸಬೇಕು ಎಂದು ಪೀಠ ಹೇಳಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಕನಿಷ್ಠ ಆರು ಸಮನ್ಸ್‌ಗಳನ್ನು ನೀಡಿದ್ದರೂ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ನಿರಾಕರಿಸುತ್ತಿರುವ ಬಗ್ಗೆ ಚರ್ಚೆ ನಡೆಯುತ್ತಿರುವ ಮಧ್ಯೆ ಸುಪ್ರೀಂ ಕೋರ್ಟ್‌ ಮಂಗಳವಾರ ಮಾಡಿರುವ ಅವಲೋಕನಗಳು ಮಹತ್ವ ಪಡೆದಿವೆ.

ಪ್ರಮುಖ ಸುದ್ದಿ :-   ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

ಮರಳು ಗಣಿಗಾರಿಕೆ ಹಗರಣದ ತನಿಖೆಗೆ ಸಂಬಂಧಿಸಿದಂತೆ ತಮಿಳುನಾಡಿನ ಐವರು ಜಿಲ್ಲಾಧಿಕಾರಿಗಳಿಗೆ ನೀಡಿದ್ದ ಸಮನ್ಸ್ ಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಭಿಪ್ರಾಯ ನೀಡಿದೆ.
ಜಾರಿ ನಿರ್ದೇಶನಾಲಯದ ಸಮನ್ಸ್ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ್ದ ಮದ್ರಾಸ್‌ ಹೈಕೋರ್ಟ್‌ ವಿಭಾಗೀಯ ಪೀಠ ಸಮನ್ಸ್‌ಗೆ ತಡೆಯಾಜ್ಞೆ ನೀಡಿತ್ತು ಇದನ್ನು ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.
ತಡೆಯಾಜ್ಞೆ ತೆಗೆದುಹಾಕಿರುವ ಸುಪ್ರೀಂ ಕೋರ್ಟ್‌ ಸಮನ್ಸ್‌ ಅನ್ವಯ ಜಿಲ್ಲಾಧಿಕಾರಿಗಳು ಇ.ಡಿ. ಮುಂದೆ ಹಾಜರಾಗಬೇಕು ಎಂದು ಸೂಚಿಸಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement