ಬಳ್ಳಾರಿ: ಕಲುಷಿತ ನೀರು ಸೇವನೆಯಿಂದ ಜನ ಅಸ್ವಸ್ಥಗೊಂಡ ಮತ್ತೊಂದು ಘಟನೆಯಲ್ಲಿ ಸಂಡೂರು ತಾಲೂಕಿನ ಅಂಕನಾಳದ 50ಕ್ಕೂ ಹೆಚ್ಚು ಗ್ರಾಮಸ್ಥರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಬಳ್ಳಾರಿ ಜಿಲ್ಲೆಯಲ್ಲಿ ಹದಿನೈದು ದಿನಗಳ ಅಂತರದಲ್ಲಿ ನಡೆದ ಎರಡನೇ ಘಟನೆಯಾಗಿದೆ.
ಅಂಕನಾಳದ ಜನರು ಕಲುಷಿತ ನೀರನ್ನು ಸೇವಿಸಿ ಅಸ್ವಸ್ಥರಾಗಿದ್ದಾರೆ ಎಂದು ಲ್ಯಾಬ್ ವರದಿಗಳು ತಿಳಿಸಿವೆ. ಆಡಳಿತವು ಈಗ ಅಶುದ್ಧ ನೀರಿನ ಮೂಲ ಯಾವುದು ಎಂದು ಪತ್ತೆಹಚ್ಚಲು ಪ್ರಯತ್ನಿಸುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಗ್ರಾಮಸ್ಥರಿಗೆ ಸಂಸ್ಕರಿತ ನೀರು ಸರಬರಾಜು ಮಾಡಲಾಗುತ್ತಿದ್ದು, ಕುದಿಸಿ ಆರಿಸಿದ ನೀರನ್ನೇ ಕುಡಿಯುವಂತೆ ಸೂಚಿಸಲಾಗಿದೆ.
ಗ್ರಾಮದಲ್ಲಿ 20 ಹಾಸಿಗೆಗಳನ್ನು ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಸ್ಥಾಪಿಸಲಾಗಿದೆ ಮತ್ತು ವೈದ್ಯರ ತಂಡವೂ ಸಹ ನಿಂತಿದೆ. ಸಿಬ್ಬಂದಿಯೊಂದಿಗೆ ಮೂರು ಆಂಬ್ಯುಲೆನ್ಸ್ಗಳನ್ನು ಕಾಯ್ದಿರಿಸಲಾಗಿದೆ. ಸುಮಾರು 20 ಜನರು ಚೇತರಿಸಿಕೊಳ್ಳುತ್ತಿದ್ದಾರೆ, ಉಳಿದವರನ್ನು ಮನೆಗೆ ಕಳುಹಿಸಲಾಗಿದೆ. ಆಡಳಿತದ ಹಿರಿಯ ಅಧಿಕಾರಿಗಳು ಸಹ ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧೀಕಾರಿ ತಿಳಿಸಿದ್ದಾರೆ ಎಂದು ನ್ಯೀ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ನೀರು ಕಲುಷಿತಗೊಳ್ಳುತ್ತಿರುವುದರ ಹಿಂದಿನ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ. ಜಿಲ್ಲಾಡಳಿತದಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜನರು ಯಾವುದೇ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೆ ಕೂಡಲೇ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ ನೀಡುವಂತೆ ಕೋರಲಾಗಿದೆ ಎಂದು ಮತ್ತೊಬ್ಬ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಹತ್ತು ದಿನಗಳ ಹಿಂದೆ ಗೋನಾಳ ಗ್ರಾಮದಲ್ಲಿ ಬಾಲಕಿಯೊಬ್ಬಳು ಕಲುಷಿತ ನೀರು ಕುಡಿದು ಮೃತಪಟ್ಟಿದ್ದಳು. ಹಾಗೂ 30 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಗೋನಾಳ ಘಟನೆಯ ನಂತರ, ಇಂತಹ ಘಟನೆಗಳು ಮರುಕಳಿಸುವುದನ್ನು ತಪ್ಪಿಸಲು ಆಡಳಿತವು ಹಲವಾರು ಕ್ರಮಗಳನ್ನು ತೆಗೆದುಕೊಂಡಿತು ಮತ್ತು ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದರು. ಆದರೂ ಕೆಲವೇ ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ಇದು ಕಂಡುಬಂದಿದೆ.
ನಿಮ್ಮ ಕಾಮೆಂಟ್ ಬರೆಯಿರಿ