ಕಿತ್ತೂರು : ಮುಂಬೈ-ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಆದ್ದರಿಂದ ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಎಂದು ಘೋಷಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಜಿಲ್ಲಾಡಳಿತ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಯ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕಿತ್ತೂರು ಉತ್ಸವ-2021 ಕ್ಕೆ ಶನಿವಾರ (ಅ.23) ಚಾಲನೆ ನೀಡಿ ಅವರು ಮಾತನಾಡಿದರು.
ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಎಂದು ಘೋಷಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನರ ಕರತಾಡನ ಮಧ್ಯೆ ಪ್ರಕಟಿಸಿದರು.
ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಿಸುವ ನಿಟ್ಟಿನಲ್ಲಿ ಸರಕಾರ ಕೂಡಲೇ ಅಗತ್ಯ ಕ್ರಮವನ್ನು ಕೈಗೊಳ್ಳಲಿದೆ ಎಂದು ಹೇಳಿದ ಅವರು, ಕಿತ್ತೂರು ಜ್ಯೋತಿಯು ಬೆಳಗಾವಿ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಸಂಚರಿಸುತ್ತಿತ್ತು. ಅದೇ ರೀತಿ ಮುಂದಿನ ಉತ್ಸವ ಸಂದರ್ಭದಲ್ಲಿ ವೀರಜ್ಯೋತಿ ರಾಜ್ಯದಾದ್ಯಂತ ಸಂಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಆದೇಶ ನೀಡಿದರು.
ಕಿತ್ತೂರು ಚೆನ್ನಮ್ಮ ಝಾನ್ಸಿಯ ರಾಣಿಗಿಂತ ನಲವತ್ತು ವರ್ಷಗಳ ಮುಂಚೆಯೇ ಸ್ವಾತಂತ್ರ್ಯಕ್ಕಾಗಿ ಕತ್ತಿ ಝಳಪಿಸಿದಳು. ಇದನ್ನು ಜಗತ್ತಿಗೆ ಸಾರುವ ಮೂಲಕ ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಪ್ರಪ್ರಥಮ ಮಹಿಳೆ ಎಂಬುದನ್ನು ಸಾಬೀತುಪಡಿಸಬೇಕಿದೆ.
ಸತ್ಯ, ನ್ಯಾಯ ಹಾಗೂ ದೇಶಕ್ಕಾಗಿ ಹೋರಾಡಲು ನಾವು ಸಂಕಲ್ಪ ಮಾಡಬೇಕಿದೆ. ದೇಶವನ್ನು ಆಂತರಿಕ ಮತ್ತು ಬಾಹ್ಯಶಕ್ತಿಗಳಿಂದ ರಕ್ಷಿಸಬೇಕಿದೆ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಸಶಕ್ತವಾಗಿಸಲು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಪ್ರಾಧಿಕಾರದ ಮಾಸ್ಟರ್ ಪ್ಲ್ಯಾನ್ ಗೆ ಒಟ್ಟಾರೆ 200 ಕೋಟಿ ರೂಪಾಯಿ ಅನುದಾನ ನೀಡಬೇಕು ಎಂಬ ಬೇಡಿಕೆ ಇದೆ. ಮುಂದಿನ ಆಯವ್ಯಯದಲ್ಲಿ ಪ್ರಾಧಿಕಾರಕ್ಕೆ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಮೀಸಲಾತಿ ಒದಗಿಸಲು ಹಾಗೂ ಪ್ರಮಾಣ ಹೆಚ್ಚಿಸಲು ಬೇಡಿಕೆಗಳು ಕೇಳಿಬಂದಿವೆ. ಇದಕ್ಕೆ ಸಂಬಂಧಿಸಿದಂತೆ ಅನೇಕ ಕಾನೂನು ತೊಡಕುಗಳಿರುವುದರಿಂದ ಅವುಗಳನ್ನು ಗಮನದಲ್ಲಿಟ್ಟುಕೊಂಡು ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರಕಾರ ಪರಿಶೀಲಿಸುತ್ತಿದೆ.
ಕಾನೂನು ಇತಿಮಿತಿಗಳನ್ನು ಸಂಪೂರ್ಣವಾಗಿ ಅಧ್ಯಯನ ಕೈಗೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಬೊಮ್ಮಾಯಿ ವೇದಿಕೆ ಮೇಲಿದ್ದ ಶ್ರೀಗಳಿಗೆ ಭರವಸೆ ನೀಡಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ ಕಿತ್ತೂರು ಚೆನ್ನಮ್ಮಳಿಗೆ ಸಿಗಬೇಕಾದ ಮಾನ್ಯತೆ ಇತಿಹಾಸದಲ್ಲಿ ದೊರಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ಕಿತ್ತೂರು ಉತ್ಸವವನ್ನು ರಾಜ್ಯ ಉತ್ಸವವೆಂದು ಘೋಷಿಸಿ ಪ್ರತಿವರ್ಷ ಎರಡು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಐವತ್ತು ಕೋಟಿ ಅನುದಾನ ಒದಗಿಸಿರುವುದಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು. ಒಟ್ಟಾರೆ 200 ಕೋಟಿ ಅನುದಾನಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಆದ್ದರಿಂದ ಮುಂದಿನ ಬಜೆಟ್ ನಲ್ಲಿ 150 ಕೋಟಿ ಅನುದಾನ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಕಿತ್ತೂರಿನ ರಾಜಗುರು ಸಂಸ್ಥಾನಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಕೂಡಲಸಂಗಮದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ,
ಹರಿಹರದ ಹರಕ್ಷೇತ್ರದ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ವಚನಾನಂದ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ಕಿತ್ತೂರು ಉತ್ಸವದ ಬೆಳ್ಳಿಹಬ್ಬದ ಪ್ರಯುಕ್ತ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರಗತಿಪರ ರೈತ ಮಹಿಳೆಯಾಗಿರುವ ರಾಯಚೂರು ಜಿಲ್ಲೆಯ ಕವಿತಾಳದ ಕವಿತಾ ಮಿಶ್ರಾ ಹಾಗೂ ರಾಣಿ ಚನ್ನಮ್ಮನ ವಂಶಸ್ಥರಾದ ಬಾಳಾಸಾಹೇಬ್ ದೇಸಾಯಿ(ಕಿತ್ತೂರಕರ) ಅವರನ್ನು ಸನ್ಮಾನಿಸಲಾಯಿತು.
ಕೋವಿಡ್ ಸೋಂಕಿನಿಂದ ಮೃತಪಟ್ಟಿರುವವರ ಕುಟುಂಬದವರಿಗೆ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ಮೂರು ಜನರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರಧನ ಚೆಕ್ ವಿತರಿಸಿದರು.
ಇದೇ ಸಂದರ್ಭದಲ್ಲಿ ಡಾ.ಸಂತೋಷ ಹಾನಗಲ್ ಅವರು ರಚಿಸಿದ “ಭಾರತದ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಕಿತ್ತೂರು ರಾಣಿ ಚೆನ್ನಮ್ಮ” ಕೃತಿಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಬಿಡುಗಡೆಗೊಳಿಸಿದರು.
ಸಚಿವರಾದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ್ ಪಾಟೀಲ, ಶಾಸಕರಾದ ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ, ಮಹಾಂತೇಶ ಕೌಜಲಗಿ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ