
ತಿರುಪತಿ,(ಆಂಧ್ರಪ್ರದೇಶ): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಪೆಟ್ರೋಲ್ ಸೋರಿಕೆಯಿಂದಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಮೃತಪಟ್ಟಿದ್ದಾರೆ. ತಿರುಪತಿ ಬಳಿಯ ಪುತಲಪಟ್ಟು-ನಾಯ್ಡುಪೇಟ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಭಾನುವಾರ ತಿರುಪತಿ ಬಳಿಯ ಇತೇಪಲ್ಲಿಯಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪೆಟ್ರೋಲ್ ಸೋರಿಕೆಯಾಗಿ ಕಾರು ಬೆಂಕಿ ಹೊತ್ತಿಕೊಂಡಿದ್ದು, ಅಪಘಾತದಲ್ಲಿ ಒಂದು ಶಿಶು ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ.
ಕಾರಿನಲ್ಲಿ ಒಟ್ಟು ಎಂಟು ಜನರಿದ್ದರು ಅದರಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರು ಮತ್ತು ಇತರ ಮೂವರನ್ನು ರುಯಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಚಿತ್ತೂರು ಬಳಿಯ ಕಾಣಿಪಾಕಂ ದೇವಸ್ಥಾನದಲ್ಲಿ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಎಲ್ಲಾ ಯಾತ್ರಾರ್ಥಿಗಳು ಶ್ರೀಕಾಕುಳಂ ಮತ್ತು ವಿಜಯನಗರ ಜಿಲ್ಲೆಗಳಿಂದ ಬಂದ ಸಂಬಂಧಿಕರಾಗಿದ್ದು, ವೆಂಕಟೇಶ್ವರ ದೇವರ ದರ್ಶನಕ್ಕಾಗಿ ತಿರುಮಲಕ್ಕೆ ತೆರಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯ ಪೊಲೀಸರು ಮತ್ತು ಜಿಲ್ಲಾ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಿರುಪತಿಯ ರಿಯಾ ಆಸ್ಪತ್ರೆಗೆ ಸಾಗಿಸಿ ಮೃತದೇಹಗಳನ್ನು ಅಲ್ಲಿನ ಶವಾಗಾರಕ್ಕೆ ರವಾನಿಸಿದ್ದಾರೆ.
ವಾಹನವು ತುಂಬಾ ವೇಗವಾಗಿ ಹೋಗುತ್ತಿತ್ತು ಎಂದು ತೋರುತ್ತದೆ, ಮುಖ್ಯ ರಸ್ತೆ ಮತ್ತು ಸರ್ವಿಸ್ ರಸ್ತೆಯ ನಡುವಿನ ಡಿವೈಡರ್ಗೆ ಡಿಕ್ಕಿ ಹೊಡೆಯುವ ಮೊದಲು ನಿಯಂತ್ರಣ ಕಳೆದುಕೊಂಡಿತು. ಅದು ತಲೆಕೆಳಗಾಗಿ ಪಲ್ಟಿಯಾಯಿತು, ನಂತರ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿತು ಎಂದು ಪೊಲೀಸ್ ಅಧೀಕಾರಿಯೊಬ್ಬರು ತಿಳಿಸಿದ್ದಾರೆ.
ಅಂಬೆಗಾಲಿಡುವ ಮಗು ಸೇರಿದಂತೆ ಇಬ್ಬರು ಬದುಕುಳಿದವರು ತಿರುಪತಿಯ RUIA ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ