ನವದೆಹಲಿ: ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಗೆ ಕಡೆವಾಣ ಹಾಕುವ ನಿಟ್ಟಿನಲ್ಲಿ ರಾಜಧಾನಿ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ಅಪ್ ಸರ್ಕಾರ ತೀರ್ಮಾನಿದೆ. ಈ ಕುರಿತು ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ.
ವಿಪತ್ತು ನಿರ್ವಹಣಾ ಪ್ರಾಧಿಕಾರದೊಂದಿಗೆ ಸಭೆ ನಡೆಸಿದ ಬಳಿಕ ವರ್ಚುವಲ್ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಯಲ್ಲಿರಲಿದೆ. ತೀರ ಅಗತ್ಯವಿದ್ದರೆ ಮಾತ್ರವೇ ಮನೆಗಳಿಂದ ಹೊರಬರಬೇಕು ಎಂದು ಜನರಿಗೆ ಮನವಿ ಮಾಡಿದ್ದಾರೆ.
ತುರ್ತು ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರಿಗೆ ಮನೆಗಳಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗುತ್ತದೆ. ಖಾಸಗಿ ಕಚೇರಿಗಳು ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ಕೆಲಸ ಮಾಡುತ್ತವೆ ಎಂದು ತಿಳಿಸಿದರು.
ಬಸ್ ಮತ್ತು ಮೆಟ್ರೊಗಳಲ್ಲಿ ಸಾಮರ್ಥ್ಯದ ಅರ್ಧದಷ್ಟು ಪ್ರಯಾಣಕ್ಕೆ ಸೂಚಿಸಿರುವ ಕಾರಣದಿಂದ ಬಸ್ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ದೊಡ್ಡದೊಡ್ಡ ಸಾಲುಗಳು ಕಂಡುಬರುತ್ತಿವೆ. ಈ ಸ್ಥಳಗಳು ಕೋವಿಡ್ ಪ್ರಕರಣಗಳ ಕ್ಷಿಪ್ರ ಏರಿಕೆಗೆ ಕಾರಣವಾಗಬಹುದು ಎಂದು ಸರ್ಕಾರ ಕಳವಳ ವ್ಯಕ್ತಪಡಿಸಿದೆ.
ಹೀಗಾಗಿ ಬಸ್ ಮತ್ತು ಮೆಟ್ರೋ ರೈಲುಗಳನ್ನು ಪೂರ್ಣ ಸಾಮರ್ಥ್ಯದೊಂದಿಗೆ ಓಡಿಸಲು ನಿರ್ಧರಿಸಲಾಗಿದೆ. ಮಾಸ್ಕ್ ಇಲ್ಲದೆ ಯಾರೊಬ್ಬರೂ ಪ್ರಯಾಣಿಸುವಂತಿಲ್ಲ ಎಂದು ಅವರು ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ