ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಪ್ರಮುಖ ಆರೋಪಿ ನಟ ದರ್ಶನ್ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಆರೋಪಿಗಳಾದ ದರ್ಶನ್, ವಿನಯ, ಪ್ರದೂಷ್, ಧನರಾಜ ಕಸ್ಟಡಿ ಅವಧಿ ಶನಿವಾರ ಮುಗಿದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಚನ್ನಬಸಪ್ಪ ಗೌಡರ ಅವರ ಮುಂದೆ ಆರೋಪಿಗಳನ್ನು ಹಾಜರುಪಡಿಸಿದರು. ವಿಚಾರಣೆಯಲ್ಲಿ ಭಾಗಿಯಾದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ ಅವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಬಹುದು ಎಂದರು.
ನಂತರ ಪೀಠವು ನಾಲ್ವರು ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಅವರನ್ನು ಪರಪ್ಪನ ಅಗ್ರಹಾರದಲ್ಲಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತದೆ. ಜೂನ್ 20ರಂದು ಉಳಿದ 13 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರಾ ಗೌಡ, ದರ್ಶನ್, ಪುಟ್ಟಸ್ವಾಮಿ ಅಲಿಯಾಸ್ ಪವನ್, ರಾಘವೇಂದ್ರ, ನಂದೀಶ, ಜಗದೀಶ ಅಲಿಯಾಸ್ ಜಗ್ಗ, ಅನುಕುಮಾರ, ರವಿ ಶಂಕರ್ ಅಲಿಯಾಸ್ ರವಿ, ಧನರಾಜ್ ಡಿ ಅಲಿಯಾಸ್ ರಾಜು, ವಿನಯ ವಿ, ನಾಗರಾಜು, ಲಕ್ಷ್ಮಣ, ದೀಪಕ್, ಪ್ರದೂಷ್, ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ನಿಖಿಲ್ ನಾಯಕ್ ಆರೋಪಿಗಳಾಗಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ