ಬೆಂಗಳೂರು : ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ ಅವರನ್ನು 1507 ಮತಗಳ ಅಂತರದಿಂದ ಸೋಲಿಸಿದರು.
ಇಂದು, ಮಂಗಳವಾರ (ಫೆಬ್ರವರಿ 20) ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತಎಣಿಕೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು 8,260 ಮತಗಳನ್ನು ಪಡೆದರೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ ಅವರಿಗೆ 6753 ಮತಗಳು ಬಿದ್ದಿವೆ. 1239 ಮತಗಳು ತಿರಸ್ಕೃತಗೊಂಡಿವೆ. ಪುಟ್ಟಣ್ಣ ಅವರು, 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರ ಅಧಿಕಾರವಧಿ 2026, ನವೆಂಬರ್ 11ರ ವರೆಗೆ ಇರಲಿದೆ.
ಬೆಂಗಳೂರು ಶಿಕ್ಷಕ ಕ್ಷೇತ್ರ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿತ್ತು. ವಿಧಾನಸಭೆ ಚುನಾವಣೆ 2023ರಲ್ಲಿ ಕಣಕ್ಕಿಳಿಯಲು ಪುಟ್ಟಣ್ಣ ಬಿಜೆಪಿ ತೊರೆದಿದ್ದರು. ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಸೇರಿದ್ದ ಅವರು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ರಾಜಾಜಿನಗರ ಕ್ಷೇತ್ರದಲ್ಲಿ ಪುಟ್ಟಣ್ಣ ಅವರು ಬಿಜೆಪಿಯ ಅಭ್ಯರ್ಥಿ ಎಸ್. ಸುರೇಶಕುಮಾರ ಅವರು ವಿರುದ್ಧ ಸೋತಿದ್ದರು. ನಂತರ ವಿಧಾನ ಪರಿಷತ್ತಿನ ಈ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಉಪಚುನಾವಣೆ ಘೋಷಣೆಯಾಗಿತ್ತು. ಈ ಉಪ ಚುನಾವಣೆಯಲ್ಲಿ ಬಿಜೆಪಿಯು ಜೆಡಿಎಸ್ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಜೆಡಿಎಸ್ನ ರಂಗನಾಥ್ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಬಳಿಕ ಕಾಂಗ್ರೆಸ್ ಪಕ್ಷ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾದ ಬಳಿಕ ಪುಟ್ಟಣ್ಣಗೆ ಟಿಕೆಟ್ ನೀಡಿತ್ತು. ಇದೀಗ ಪುಟ್ಟಣ್ಣ ಮತ್ತೊಮ್ಮೆ ತಾವು ಈ ಮೊದಲು ಗೆದ್ದ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ