ಪಶ್ಚಿಮ ಘಟ್ಟ : ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತ ಡಾ.ಕೆ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ತನ್ನ ನಿರ್ಧಾರಕ್ಕೆ ಬದ್ಧವಾಗಿರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ. ಇಡೀ ಭೂ ಭಾಗ ರಾಜ್ಯದ ನಿಯಂತ್ರಣದಿಂದ ಕೇಂದ್ರದ ಸುಪರ್ದಿಗೆ ಹೋಗುತ್ತದೆ. ಈ ಬಗ್ಗೆ ಸಚಿವ ಸಂಪುಟವು ವಿಸ್ತೃತ ಚರ್ಚೆ ನಡೆಸಿದ್ದು ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ತಿಳಿಸಿದ್ದಾರೆ.

ಮಾನವನ ಹಸ್ತಕ್ಷೇಪದಿಂದ ಪಶ್ಚಿಮ ಘಟ್ಟ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎಂದು ಪರಿಸರ ತಜ್ಞರ ಆತಂಕದ ನಂತರ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧ ಮಧ್ಯೆ ಗುರುವಾರದ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ.
ಇತ್ತೀಚೆಗೆ ಅರಣ್ಯ ಇಲಾಖೆ ಆಯೋಜಿಸಿದ್ದ ಸಮಾಲೋಚನೆಯಲ್ಲಿ, ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದ (ಇಎಸ್‌ಎ) ಹೊರಡಿಸಲಾಗಿದ್ದ ಆರನೇ ಕರಡು ಅಧಿಸೂಚನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಾದ್ಯಂತ ಪಶ್ಚಿಮ ಘಟ್ಟಗಳ 56,825.7 ಚದರ ಕಿಲೋಮೀಟರ್‌ಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಲು ಕೇಂದ್ರ ಪರಿಸರ ಸಚಿವಾಲಯವು 2014ರ ಮಾರ್ಚ್ ನಿಂದ ಆರು ಕರಡು ಅಧಿಸೂಚನೆಗಳನ್ನು ಹೊರಡಿಸಿದೆ. ಆದರೆ, ಈ ರಾಜ್ಯಗಳ ಆಕ್ಷೇಪದಿಂದಾಗಿ ಇನ್ನೂ ಅಂತಿಮ ಅಧಿಸೂಚನೆ ಹೊರಡಿಸಿಲ್ಲ.
ಅಧಿಸೂಚನೆಯು ಗುಜರಾತ್‌ನಲ್ಲಿ 449 ಚದರ ಕಿಲೋಮೀಟರ್, ಮಹಾರಾಷ್ಟ್ರದಲ್ಲಿ 17,340 ಚದರ ಕಿಲೋಮೀಟರ್, ಗೋವಾದಲ್ಲಿ 1,461 ಚದರ ಕಿಲೋಮೀಟರ್, ಕರ್ನಾಟಕದಲ್ಲಿ 20,668 ಚದರ ಕಿಲೋಮೀಟರ್, ತಮಿಳುನಾಡಿನಲ್ಲಿ 6,914 ಚದರ ಕಿಲೋಮೀಟರ್ ಮತ್ತು ಕೇರಳದಲ್ಲಿ 9,993.7 ಚದರ ಕಿಲೋಮೀಟರ್‌ಗಳನ್ನು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದ (ಇಎಸ್‌ಎ) ಆಗಿ ಘೋಷಿಸಲು ಪ್ರಸ್ತಾಪಿಸಿದೆ.

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement