ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್ ನಿಲುವಿನ ವಿರುದ್ಧ ಹೇಳಿಕೆ ನೀಡಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ.
ಇಡೀ ಕಾಂಗ್ರೆಸ್ ಪಕ್ಷವೇ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಚುನಾವನಾ ಆಯೋಗದ ವಿರುದ್ಧವಾಗಿ ಹೋರಾಟ ನಡೆಸಿದರೆ, ಸಚಿವ ಕೆ.ಎನ್.ರಾಜಣ್ಣ ವ್ಯತಿರಿಕ್ತ ಹೇಳಿಕೆ ನೀಡುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ರಾಜ್ಯಸರ್ಕಾರದ ಹೊಣೆಗಾರಿಕೆ ಕರಡು ಪಟ್ಟಿಯನ್ನು ನೀಡಿದಾಗ ಕಾಂಗ್ರೆಸಿಗರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸುವ ಮೂಲಕ ಪಕ್ಷದ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದರು. ರಾಹುಲ್ಗಾಂಧಿ ಆಗಸ್ಟ್ 8 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತಗಳ್ಳತನದ ವಿರುದ್ಧ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟದ ಎಲ್ಲಾ ಸಚಿವರು ಪಾಲ್ಗೊಂಡಿದ್ದರು. ಆದರೆ ರಾಜಣ್ಣ ಪ್ರತಿಭಟನೆಯಿಂದ ದೂರ ಉಳಿದಿದ್ದರು. ರಾಜಣ್ಣ ಅವರ ಹೇಳಿಕೆ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದ್ದರಿಂದ ಕಾಂಗ್ರೆಸ್ ಹೈಕಮಾಂಡಿಗೆ ಮುಜುಗರವಾಗಿತ್ತು. ಈಗ ಹೈಕಮಾಂಡ್ ಸೂಚನೆ ಹಿನ್ನೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.
ತುಮಕೂರಿನಲ್ಲಿ ಮಾತನಾಡಿದ್ದ ಸಚಿವ ಕೆ.ಎನ್.ರಾಜಣ್ಣ, ವೋಟರ್ ಲಿಸ್ಟ್ ಯಾರ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿದ್ದು. ಆಗ ಎಲ್ಲರೂ ಕಣ್ಮುಚ್ಚಿ ಕುಳಿತಿದ್ರಾ ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದರು. ಇದರಿಂದ ಕಾಂಗ್ರೆಸ್ಗೆ ತೀವ್ರ ಮುಜುಗರ ಉಂಟಾಗಿತ್ತು.
ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಈ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಅವರಿಗೆ ದೂರು ಸಲ್ಲಿಸಿದ್ದರು. ಹೀಗಾಗಿ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆಗೆ ಪಕ್ಷದಿಂದ ಒತ್ತಡ ಹೆಚ್ಚಾಗಿತ್ತು. ಹೀಗಾಗಿ ರಾಜೀನಾಮೆಗೆ ಹೈ ಕಮಾಂಡ್ನಿಂದ ಸೂಚನೆ ಬಂಧ ನಂತರ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ