ಬೆಂಗಳೂರು: ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದಂತೆ ಜಿಲ್ಲಾಧಿಕಾರಿ ದಯಾನಂದ ಅವರು ಇಂದು ಮಂಗಳವಾರ ಪ್ರಾಂಜಲ್ ಅವರು ಕುಟುಂಬಕ್ಕೆ ಚೆಕ್ ನೀಡಿದ್ದಾರೆ.
ಜಿಲ್ಲಾಧಿಕಾರಿ ದಯಾನಂದ ಅವರು ಪ್ರಾಂಜಲ್ ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರಿಗೆ 25 ಲಕ್ಷ ರೂಪಾಯಿ ಮೊತ್ತದ ಎರಡು ಚೆಕ್ ಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ನಿರ್ದೇಶಕರಾದ ಶಶಿಧರ್ ಅವರು ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿಯೂ ರಾಜ್ಯ ಸರ್ಕಾರ ನಿಮ್ಮ ಕುಟುಂಬದ ಜತೆ ಇರಲಿದೆ ಎಂದು ಭರವಸೆ ನೀಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ ಎಂದು ಹೇಳಿದ್ದಾರೆ.
ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಬರೆದುಕೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ