ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ರಾಜೀನಾಮೆ

ನವದೆಹಲಿ: ಭ್ರಷ್ಟಾಚಾರದ ಆರೋಪದ ಮೇಲೆ ವಜಾಗೊಳಿಸುವ ಪ್ರಕ್ರಿಯೆಯನ್ನು (Impeachment) ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವರ್ಷ ದೆಹಲಿಯ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ನಂತರ ವರ್ಮಾ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ನ್ಯಾಯಮೂರ್ತಿ ವರ್ಮಾ ಅವರು ತಮ್ಮ ಈ ನಿರ್ಧಾರಕ್ಕೆ ಯಾವುದೇ ನಿರ್ದಿಷ್ಟ ಕಾರಣವನ್ನು ಉಲ್ಲೇಖಿಸಿಲ್ಲ. “ನನ್ನ ಈ ನಿರ್ಧಾರಕ್ಕೆ ಕಾರಣವಾದ ವಿಚಾರಗಳನ್ನು ವಿವರಿಸುವ ಮೂಲಕ ನಿಮ್ಮ ಕಚೇರಿಗೆ ಹೊರೆಯಾಗಲು ನಾನು ಬಯಸುವುದಿಲ್ಲ. ಆದರೆ, ಅತ್ಯಂತ ನೋವಿನಿಂದ ನಾನು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ,” ಎಂದು ಏಪ್ರಿಲ್ 9 ರಂದು ಬರೆದ ಪತ್ರದಲ್ಲಿ ಅವರು ತಿಳಿಸಿದ್ದಾರೆ.

ಲೋಕಸಭೆಯ ಸಚಿವಾಲಯದ ಮೂಲಗಳ ಪ್ರಕಾರ, ನ್ಯಾಯಮೂರ್ತಿಗಳು ರಾಜೀನಾಮೆ ನೀಡಿರುವುದರಿಂದ ಅವರನ್ನು ಪದಚ್ಯುತಗೊಳಿಸಲು ಸಂಸತ್ತಿನಲ್ಲಿ ನಡೆಯುತ್ತಿದ್ದ ದೋಷಾರೋಪಣೆ (Impeachment) ಪ್ರಕ್ರಿಯೆಯು ಈಗ ಕೊನೆಗೊಳ್ಳಲಿದೆ. ಒಂದು ವೇಳೆ ಸಂಸತ್ತು ಅವರನ್ನು ವಜಾಗೊಳಿಸಿದ್ದರೆ, ಅವರು ಪಿಂಚಣಿ ಮತ್ತು ಇತರ ನಿವೃತ್ತಿ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಿದ್ದರು. ಆದರೆ ರಾಜೀನಾಮೆ ನೀಡಿರುವುದರಿಂದ ಅವರು ಈ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಲಿದ್ದಾರೆ.

ಪ್ರಮುಖ ಸುದ್ದಿ :-   ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಪ್ರಕರಣದ ಹಿನ್ನೆಲೆ
ಮಾರ್ಚ್ 14, 2025 ರಂದು ದೆಹಲಿಯ ಲುಟ್ಯೆನ್ಸ್ ಬಡಾವಣೆಯ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಆ ಸಮಯದಲ್ಲಿ ಅವರು ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿದ್ದರು.
ಮನೆಯ ಸ್ಟೋರ್ ರೂಂನಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಹಣ ಪತ್ತೆಯಾಗಿತ್ತು. ಆ ಸಮಯದಲ್ಲಿ ನ್ಯಾಯಮೂರ್ತಿ ವರ್ಮಾ ಮತ್ತು ಅವರ ಪತ್ನಿ ಭೋಪಾಲ್‌ನಲ್ಲಿದ್ದರು. ಆದರೆ, ಆ ಹಣಕ್ಕೂ ತಮಗೂ ಸಂಬಂಧವಿಲ್ಲ ಎಂದು ವರ್ಮಾ ವಾದಿಸಿದ್ದರು. ನ್ಯಾಯಾಧೀಶರು ತಾವು ಅಥವಾ ತಮ್ಮ ಕುಟುಂಬ ಸದಸ್ಯರು ಸ್ಟೋರ್ ರೂಂನಲ್ಲಿ ಎಂದಿಗೂ ನಗದು ಇಟ್ಟುಕೊಂಡಿಲ್ಲ ಎಂದು ನಿರಾಕರಿಸಿದ್ದರು. .

ಈ ಬಗ್ಗೆ ಸುಪ್ರೀಂ ಕೋರ್ಟ್ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿ ವಿಚಾರಣೆ ನಡೆಸಿತ್ತು. ವರದಿ ಸಲ್ಲಿಕೆಯಾದ ನಂತರ, ವರ್ಮಾ ಅವರಿಂದ ನ್ಯಾಯಾಂಗ ಕಾರ್ಯಗಳನ್ನು ಹಿಂಪಡೆಯಲಾಗಿತ್ತು ಮತ್ತು ಅವರನ್ನು ದೆಹಲಿಯಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು.
ಕಳೆದ ಜುಲೈನಲ್ಲಿ ಅವರ ವಿರುದ್ಧ ಸಂಸತ್ತಿನಲ್ಲಿ ದೋಷಾರೋಪಣೆ ಪ್ರಕ್ರಿಯೆ ಆರಂಭವಾಗಿತ್ತು. ಈ ವರ್ಷದ ಆರಂಭದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು ಈ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ತನಿಖಾ ಸಮಿತಿಯ ವರದಿ ಸಲ್ಲಿಕೆಯಾಗುವ ಮುನ್ನವೇ ವರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement