ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು 2023ರ ಆಗಸ್ಟ್ 10ರಂದು ಬರೆದಿರುವ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ.
ಬೆಂಗಳೂರಿನ ಅನೀಸ್ ಫಾತಿಮಾ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ-ಕಿರಿಯ ಆರೋಗ್ಯ ಪರಿವೀಕ್ಷಕರು, ಎಸ್ಡಿಎ, ಎಫ್ಡಿಎ, ಸಹಾಯಕ ಇಂಜಿನಿಯರ್ ಹುದ್ದೆಯ 17 ಮಂದಿ ಅಧಿಕಾರಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರ ನೇತೃತ್ವದ ಏಕಸದಸ್ಯ ಪೀಠ ಈ ತಡೆ ನೀಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಉಪ ಮುಖ್ಯಮಂತ್ರಿ ಶಿವಕುಮಾರ ಅವರ ಆಗಸ್ಟ್ 10ರ ಟಿಪ್ಪಣಿ ಆಧರಿಸಿ ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಕೈಗೊಳ್ಳುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ. ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರ ವಕೀಲ ವಿ ಶ್ರೀನಿವಾಸ ವಾದ ಮಂಡಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ