ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸುಮಾರು ಮೂರು ಎಕರೆ ಭೂಮಿಯನ್ನು ಬಿಲ್ಡರ್ ಒಬ್ಬರಿಗೆ ಡಿನೋಟಿಫೈ ಮಾಡಿಕೊಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ಯಾಮ್ ಭಟ್ ವಿರುದ್ಧ ಬುಧವಾರ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಅವರು ನೀಡಿದ ದೂರನ್ನು ಲೋಕಾಯುಕ್ತ ಪೊಲೀಸರು ಸ್ವೀಕರಿಸಿದ್ದಾರೆ. ಸ್ವೀಕೃತಿ ಪ್ರತಿಯ ಆರೋಪದ ವಿಭಾಗದಲ್ಲಿ ಭ್ರಷ್ಟಾಚಾರ, ನಿರ್ಲಕ್ಷ್ಯ, ಕರ್ತವ್ಯ ಲೋಪ ಎಂದು ಸಂಕ್ಷಿಪ್ತವಾಗಿ ಉಲ್ಲೇಖಿಸಲಾಗಿದೆ ಎಂದು ವರದಿ ಹೇಳಿದೆ.
ವರದಿ ಪ್ರಕಾರ, ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಸಬಾ ಹೋಬಳಿಯ ಲಾಲ್ಬಾಗ್ ಸಿದ್ಧಾಪುರ ಗ್ರಾಮದಲ್ಲಿ (ಜಯನಗರ 1ನೇ ಬ್ಲಾಕ್) ಸರ್ವೆ ನಂ. 27/1, 28/4, 28/5 ಮತ್ತು 28/6ರಲ್ಲಿನ 2 ಎಕರೆ 39.5 ಗುಂಟೆ ಜಮೀನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಪ್ರಕಾರ ಉದ್ಯಾನವನ-ಸಾರ್ವಜನಿಕ ಬಳಕೆಗೆ ಮೀಸಲಿಡಲಾಗಿದೆ. ನಿಯಮಗಳ ಪ್ರಕಾರ ಇಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ ಎಂದು ವಿವರಿಸಲಾಗಿದೆ.
ಸಾರ್ವಜನಿಕ ಉದ್ಯಾನವನಕ್ಕೆ ಮೀಸಲಾಗಿದ್ದ 2 ಎಕರೆ 39.5 ಗುಂಟೆ ಜಮೀನನ್ನು ಬಿಲ್ಡರ್ ಅಶೋಕ್ ಧಾರಿವಾಲ್ ಅವರಿಗೆ ಅಕ್ರಮವಾಗಿ 2014ರ ನವೆಂಬರ್ 18ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಡಿನೋಟಿಫೈ ಮಾಡಿಕೊಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹಿಂದಿನ ಅಧಿಸೂಚನೆಯನ್ನು ರದ್ದುಪಡಿಸಿ, ರಿ ಡೂ ಹೆಸರಿನಲ್ಲಿ ಆಕ್ಷೇಪಿತ ಸರ್ಕಾರಿ ಸ್ವತ್ತಿಗೆ ಭೂಮಿ ಬಳಕೆ ಬದಲಾವಣೆ ಮಾಡಿಕೊಡಲಾಗಿದೆ. ಇವರ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ, ಭ್ರಷ್ಟಾಚಾರ ಮತ್ತು ಸರ್ಕಾರಿ ಭೂಮಿ ಕಬಳಿಕೆ ಸಂಚಿನ ಆರೋಪದ ಅಡಿ ಪ್ರಕರಣದ ದಾಖಲಿಸಬೇಕು ಎಂದು ಕೋರಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ