ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ತಾಪಮಾನ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು, ಕಾರ್ಮಿಕರು ಸೇರಿ ವಿವಿಧ ವರ್ಗದವರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ..
ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಆದಷ್ಟು ಹೊರ ಹೋಗುವುದನ್ನು ತಪ್ಪಿಸಿಕೊಳ್ಳಿ ಎಂದು ಸಲಹೆ ನೀಡಿದೆ. ಈ ಅವಧಿಯಲ್ಲಿ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಜ್ವರ, ತಲೆನೋವು, ಊತಗಳು, ಸ್ನಾಯು ಸೆಳೆತ, ಪ್ರಜ್ಞೆ ತಪ್ಪುವಿಕೆ, ಸುಸ್ತು, ಪಾರ್ಶ್ವವಾಯು ಸೇರಿ ವಿವಿಧ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ತೀವ್ರ ಉಷ್ಣತೆಯಿಂದ ಹೃದ್ರೋಗ, ಉಸಿರಾಟ, ಮೂತ್ರಪಿಂಡದ ಸಮಸ್ಯೆಯೂ ಕಾಣಿಸಿಕೊಳ್ಳಬಹುದು.ಬಿಸಿಲಿನ ಶಾಖಕ್ಕೆ ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿ, ಮೂತ್ರ ವಿಸರ್ಜನೆ ಸಮಸ್ಯೆ, ಏರುಗತಿ ಉಸಿರಾಟ ಸೇರಿ ವಿವಿಧ ಸಮಸ್ಯೆಗಳು ಸಹ ಕಾಣಿಸಿಕೊಳ್ಳಲಿವೆ. ಸನ್ ಸ್ಟ್ರೋಕ್ ವೈದ್ಯಕೀಯ ತುರ್ತು ಸಂದರ್ಭವಾಗಿದೆ. ದೇಹದ ಉಷ್ಣಾಂಶ ಹೆಚ್ಚಿ ಪ್ರಜ್ಞೆ ತಪ್ಪುವುದು, ಬೆವರುವಿಕೆ ತೊಂದರೆಗಳು ಕಾಣಿಸಿದಲ್ಲಿ ತಕ್ಷಣವೇ ಸಹಾಯವಾಣಿ 108 ಅಥವಾ 102ಕ್ಕೆ ಕರೆ ಮಾಡಬಹುದು ಎಂದು ಮಾರ್ಗಸೂಚಿ ಹೇಳಿದೆ.
ಮಾರ್ಗಸೂಚಿಗಳು…
ಪ್ರಯಾಣ ಸಮಯದಲ್ಲೂ ಕುಡಿಯುವ ನೀರು ಜೊತೆಗೆ ಇರಬೇಕು. ಮೌಖಿಕ ಮನರ್ಜಲೀಕರಣ ದ್ರಾವಣ (ORS), ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಜ್ಯೂಸ್, ಮಜ್ಜಿಗೆ, ಹಣ್ಣಿನ ಜ್ಯೂಸ್ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಬಹುದಾಗಿದೆ.
ಹೆಚ್ಚು ನೀರಿನಂಶ ಹೊಂದಿರುವ ಹಣ್ಣು, ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟ್ಯೂಸ್, ಎಳನೀರು ಹೆಚ್ಚಾಗಿ ಸೇವಿಸಬೇಕು. ತಾಪಮಾನ ಹೆಚ್ಚಿರುವುದರಿಂದ ಬಿಸಿಲಿನ ಪ್ರಖರತೆಯಿಂದ ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸುವುದು ಉತ್ತಮ. ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ, ಶೂಗಳನ್ನು ಧರಿಸುವುದು ಉತ್ತಮ.
ಹೊರಾಂಗಣ ಚಟುವಟಿಕೆಗಳನ್ನು ಆದಷ್ಟು ಬೆಳಿಗ್ಗೆ 11 ಗಂಟೆಯ ಮೊದಲು ಅಥವಾ ಸಂಜೆ 4 ಗಂಟೆಯ ನಂತರಕ್ಕೆ ನಿಗದಿಪಡಿಸಿ. ಸಭೆ, ಸಮಾರಂಭಗಳಿದ್ದಲ್ಲಿ ಬಿಸಿಲಿನಿಂದ ರಕ್ಷಣೆ ಪಡೆಯಲು ಶಾಮಿಯಾನ, ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು. ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು.
ಬಿಸಿಲಿಗೆ ನವಜಾತ ಶಿಶುಗಳು, ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರು, ಹೃದ್ರೋಗ, ಅಧಿಕ ರಕ್ತದೊತ್ತಡ ಮೊದಲಾದ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ವಹಿಸಬೇಕು.
ಮದ್ಯಪಾನ, ಚಹಾ, ಕಾಫಿ, ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶ ಹೊಂದಿದ ಪಾನೀಯಗಳಿಂದ ದೂರವಿರಬೇಕು. ಹೆಚ್ಚು ಪ್ರೋಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಕು.
ಮಕ್ಕಳು ಮತ್ತು ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳ ಒಳಗೆ ಬಿಡಬಾರದು. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅಪಾಯಕಾರಿ ಆಗಬಹುದು.
ಸನ್ ಸ್ಟ್ರೋಕ್ ಆದರೆ ಏನು ಮಾಡಬೇಕು…?
ವೈದ್ಯಕೀಯ ಸಹಾಯಕ್ಕಾಗಿ ತಕ್ಷಣ 108/102 ಗೆ ಕರೆ ಮಾಡಿ.
ವ್ಯಕ್ತಿಯನ್ನು ತಂಪಾಗಿರುವ ಸ್ಥಳಕ್ಕೆ ಸ್ಥಳಾಂತರಿಸಬೇಕು. ಚರ್ಮಕ್ಕೆ ತಣ್ಣೀರು ಹಚ್ಚಿ, ಫ್ಯಾನ್ ಹಾಕಬೇಕು. ಲಕ್ಷಣಗಳು ಉಲ್ಬಣಗೊಳ್ಳುವವರೆಗೆ ಕಾಯಬೇಕು. ವೈದ್ಯಕೀಯ ನೆರವು ಪಡೆಯಬೇಕು.
ತಾಪಮಾನದ ಕುರಿತು ಭಾರತ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದ್ದು, ಕಾರವಾರದಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 15.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ