ಬೆಂಗಳೂರು : ಮುಸ್ಲಿಮರನ್ನು ನುಸುಳುಕೋರರು ಎಂದು ಕರೆದಿದ್ದ ಹಾಗೂ “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ” ಎಂದು ಪ್ರಚೋದನಾಕಾರಿ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.
ಪ್ರಧಾನಿಯ ಭಾಷಣವು ಮುಸ್ಲಿಮರನ್ನು ನಿಂದಿಸುವಂತಿದೆ. ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತೆ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಸಮಾಜದಲ್ಲಿ ದ್ವೇಷ ಹರಡಿದ, ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಪ್ರಧಾನಿ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬೆಂಗಳೂರಿನ ಹೆಬ್ಬಾಳದ ನಿವಾಸಿ 32 ವರ್ಷದ ಜಿಯಾವುರ್ ರಹಮಾನ್ ನೊಮಾನಿ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮೇ 23ರಂದು ಖಾಸಗಿ ದೂರು ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ವರದಿ ಪ್ರಕಾರ, ಕಳೆದ ತಿಂಗಳು ರಾಜಸ್ಥಾನದಲ್ಲಿ ನಡೆದಿದ್ದ ಪ್ರಚಾರ ಭಾಷಣದಲ್ಲಿ ಸಮಾಜ ಮತ್ತು ಧರ್ಮಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಕ್ರಿಮಿನಲ್ ಪ್ರಚೋದನೆ ನೀಡುವ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ಗಳಾದ 153ಎ, 153ಬಿ, 295ಎ, 503, 504, 505(2) ಅಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಕರಣ ದಾಖಲಿಸಲು ಅಮೃತಹಳ್ಳಿ ಠಾಣಾ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಖಾಸಗಿ ದೂರಿನಲ್ಲಿ ಕೋರಲಾಗಿದೆ.
ಪ್ರಧಾನಿ ಮೋದಿ ದ್ವೇಷ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮ ಸೇರಿದಂತೆ ಎಲ್ಲಾ ಮಾಧ್ಯಮಗಳಲ್ಲಿ ವ್ಯಾಪಕ ಪ್ರಸಾರವಾಗಿದ್ದು, ಇದು ಪ್ರಕರಣದಲ್ಲಿ ಸಾಕ್ಷಿಯಾಗಿರುವ ಆರ್ ಕಲೀಮುಲ್ಲಾ ಅವರ ಗಮನಕ್ಕೂ ಬಂದಿದೆ. ಹೀಗಾಗಿ, ತಕ್ಷಣ ಏಪ್ರಿಲ್ 26ರಂದು ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಅಮೃತಹಳ್ಳಿ ಪೊಲೀಸರು ಭಾರತೀಯ ಚುನಾವಣಾ ಆಯೋಗದ ವ್ಯಾಪ್ತಿಗೆ ಒಳಪಡುವುದರಿಂದ ಎಫ್ಐಆರ್ ದಾಖಲಿಸಲಾಗದು ಎಂದು ಹಿಂಬರಹ ನೀಡಿದ್ದರು. ಇದಾದ ಬಳಿಕ ಏಪ್ರಿಲ್ 27ರಂದು ದೂರುದಾರ ನೊಮಾನಿ ಈಮೇಲ್ ಮೂಲಕ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಅಲ್ಲಿಂದಲೂ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮೇ 23ರಂದು ನ್ಯಾಯಾಲಯದ ಮೆಟ್ಟಿಲೇರಲಾಗಿದೆ ಎಂದು ಖಾಸಗಿ ದೂರಿನಲ್ಲಿ ವಿವರಿಸಲಾಗಿದೆ. ಇದರ ವಿಚಾರಣೆಯು ಮೇ 28ಕ್ಕೆ ನಿಗದಿಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ