ವಿದ್ಯಾಪೀಠದ ದೈನಂದಿನ ವ್ಯವಹಾರದ ಹೊರತಾದ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ: ಮುರುಘಾ ಶರಣರಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ವಿದ್ಯಾಪೀಠದ ಅಧ್ಯಕ್ಷರಾಗಿರುವ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮೌಖಿಕವಾಗಿ ಸೂಚಿಸಿದೆ.
ಪೋಕ್ಸೊ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಮಠದ ಎಸ್‌ಜೆ‌ಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದು ಆಕ್ಷೇಪಿಸಿ ವಿದ್ಯಾಪೀಠದ ಆಡಳಿತ ಮಂಡಳಿ ನಿರ್ದೇಶಕ ಆರ್‌.ನಾಗರಾಜ ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶಿವಮೂರ್ತಿ ಮುರುಘಾ ಶರಣರು ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡಿದ್ದಾರೆ. ಆ ಮೂಲಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ಪೀಠಕ್ಕೆ ತಿಳಿಸಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣ : ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್ಐಟಿ

ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, “ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವಾಗ ಅಧಿಕಾರ ನಡೆಸಲು ಅಷ್ಟೊಂದು ಆತುರವೇಕೆ? ದೋಷಾರೋಪಗಳಿಂದ ಮುಕ್ತರಾಗುವ ವರೆಗೆ ಇದರಿಂದ ದೂರ ಇರುವುದು ಒಳಿತಲ್ಲವೇ? ಜಿಲ್ಲಾ ಪ್ರಧಾನ ನ್ಯಾಯಾಧೀಶರು ಉಸ್ತುವಾರಿ ನೋಡಿಕೊಳ್ಳುವಂತೆ ಹೈಕೋರ್ಟ್‌ ಹೇಳಿತ್ತಲ್ಲ? ಒಂದು ವೇಳೆ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಸಮರ್ಪಕವಾಗಿ ಕಾರ್ಯಭಾರ ಮಾಡುತ್ತಿಲ್ಲ ಎಂದಾದರೆ ಆಗ ಅದನ್ನು ನೋಡಿಕೊಳ್ಳಲು ಹೈಕೋರ್ಟ್‌ ಇಲ್ಲವೇ?” ಎಂದು ಪ್ರಶ್ನಿಸಿತು.
ಈ ವೇಳೆ ಮುರುಘಾ ಶರಣರ ಪರ ವಕೀಲರು, ವಿದ್ಯಾಪೀಠದ ನೀತಿ ನಿರ್ಧಾರದ ವಿಷಯದಲ್ಲಿ ಶರಣರು ಯಾವ ತೀರ್ಮಾನವನ್ನೂ ಕೈಗೊಳ್ಳುವುದಿಲ್ಲ ಎಂದು ಪೀಠಕ್ಕೆ ಭರವಸೆ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠವು ಶರಣರು ವಿದ್ಯಾಪೀಠದ ನೀತಿ ನಿರ್ಧಾರ ವಿಚಾರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಬಾರದು. ಅವರು ಕೇವಲ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ನೋಡಿಕೊಳ್ಳಬಹುದು ಎಂದು ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿತು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement