
ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ತನಿಖಾ ದಳ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಸಿ.ಟಿ.ರವಿಕುಮಾರ ಮತ್ತು ನ್ಯಾಯಮೂರ್ತಿ ಸಂಜಯಕುಮಾರ ಅವರಿದ್ದ ಪೀಠ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ ಪೀಠವು ತಾನು ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಹೋಗುವುದಿಲ್ಲ ಎಂದು ಹೇಳಿತು ಮತ್ತು ತನ್ನ ಮುಂದಿರುವ ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಹೈಕೋರ್ಟ್ಗೆ ಮನವಿ ಮಾಡಲು ಸಿಬಿಐಗೆ ಸ್ವಾತಂತ್ರ್ಯವನ್ನು ನೀಡಿತು.
ಪ್ರಸ್ತುತ, ಈ ವಿಷಯವು ಹೈಕೋರ್ಟ್ನ ವಿಭಾಗೀಯ ಪೀಠದ ಮುಂದೆ ಮೇಲ್ಮನವಿಯಲ್ಲಿ ಬಾಕಿ ಉಳಿದಿದ್ದು, ಜೂನ್ನಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಶಿವಕುಮಾರ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಅನುಮತಿ ನೀಡಿದ ರಾಜ್ಯ ಸರ್ಕಾರದ 2019 ರ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಆದಾಯ ತೆರಿಗೆ ಇಲಾಖೆಯು 2017 ರಲ್ಲಿ ಶಿವಕುಮಾರ ಅವರ ಕಚೇರಿಗಳು ಮತ್ತು ನಿವಾಸಗಳಲ್ಲಿ ಶೋಧ ಮತ್ತು ಜಪ್ತಿ ಕಾರ್ಯಾಚರಣೆ ನಡೆಸಿತ್ತು.
ಅದರ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ (ಇಡಿ) ಅವರ ವಿರುದ್ಧ ತನ್ನ ತನಿಖೆಯನ್ನು ಪ್ರಾರಂಭಿಸಿತು, ಅದರ ನಂತರ, ಕಾಂಗ್ರೆಸ್ ನಾಯಕನ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತು. ಇದು ರಾಜಕೀಯ ಪ್ರೇರಿತ ಎಫ್ಐಆರ್ ಮತ್ತು ಅಸಮಾನ ಆದಾಯಕ್ಕೆ ಸಂಬಂಧಿಸಿದಂತೆ ಈಗಾಗಲೇ ತಮ್ಮ ವಿರುದ್ಧ ಮೂರು ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಶಿವಕುಮಾರ ಅವರು ಸಿಬಿಐಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿದ್ದರು. ಶಿವಕುಮಾರ ಅವರು ಹೈಕೋರ್ಟ್ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳಲ್ಲಿ ಮಂಜೂರಾತಿ ಮತ್ತು ಎಫ್ಐಆರ್ ಎರಡನ್ನೂ ಪ್ರಶ್ನಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ನಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಶಿವಕುಮಾರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(2), ಸೆಕ್ಷನ್ 13(1)(ಇ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.



ನಿಮ್ಮ ಕಾಮೆಂಟ್ ಬರೆಯಿರಿ