ಲಂಚ ಪ್ರಕರಣ: ಮಾಡಾಳು ಪ್ರಶಾಂತಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಕಾರ್ಯಾದೇಶ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಕೆ.ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ ಅವರಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿಯೂ ಆದ ಪ್ರಶಾಂತ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ.
ಅರ್ಜಿದಾರರು ಐದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಯಾವುದೇ ಪ್ರಕರಣದಲ್ಲಿ ಮತ್ತೆ ಭಾಗಿಯಾಗಬಾರದು. ಪ್ರಕರಣದ ಸಾಕ್ಷ್ಯಾಧಾರ ನಾಶಪಡಿಸಲು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು. ಪೂರ್ವಾನಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿಬಿಟ್ಟು ತೆರಳಬಾರದು. ಪಾರ್ಸ್‌ಪೋರ್ಟ್ ಅನ್ನು ತನಿಖಾಧಿಕಾರಿಯ ಸುಪರ್ದಿಗೆ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ.

ಇದಕ್ಕೂ ಮುನ್ನ, ಪ್ರಶಾಂತ ಪರ ವಕೀಲ ಶಂಕರ ಹೆಗಡೆ ವಾದ ಮಂಡಿಸಿ, ಕೆಎಎಸ್‌ಡಿಎಲ್ ಗುತ್ತಿಗೆಗಳು ಇ-ಟೆಂಡರ್ ಪ್ರಕ್ರಿಯೆ ಮೂಲಕ ನಡೆಸಲಾಗುತ್ತದೆ. ಟೆಂಡರ್ ಕುರಿತು ಸಮಿತಿಯೇ ನಿರ್ಧಾರ ತೆಗೆದುಕೊಳ್ಳುತ್ತದೆ. ಆದ್ದರಿಂದ, ಪ್ರಕರಣದಲ್ಲಿ ಅರ್ಜಿದಾರ ಅಥವಾ ಅವರ ತಂದೆಯ ಯಾವುದೇ ಪಾತ್ರವಿಲ್ಲ. ಮೇಲಾಗಿ ದೂರು ನೀಡಿರುವವರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿತ್ತು. ಇದೇ ದ್ವೇಷದಿಂದ ಅವರು ಸುಳ್ಳು ದೂರು ನೀಡಿದ್ದಾರೆ. ಪ್ರಕರಣದ ತನಿಖೆಗೆ ಅರ್ಜಿದಾರರು ಎಲ್ಲ ರೀತಿಯ ಸಹಕಾರ ನೀಡಲಿದ್ದು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿದರು.
ಪ್ರಕರಣದಲ್ಲಿ ದೂರುದಾರ ಶ್ರೇಯಸ್ ಕಶ್ಯಪ್ ನಿರ್ದೇಶಕರಾಗಿರುವ ಮೆರ್ಸೆಸ್ ಡಿಲಿಸಿಯಾ ಕೆಮಿಕಲ್ಸ್ ಕಂಪೆನಿಯಿಂದ ಕೆಮಿಕಲ್ ಆಯಿಲ್ ಖರೀದಿಯ ಕುರಿತ ಕೆಎಸ್‌ಡಿಎಲ್ ಟೆಂಡರ್ ಕಾರ್ಯಾದೇಶ ನೀಡಲು ಪ್ರತಿಯಾಗಿ 40 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಪ್ರಶಾಂತ ವಿರುದ್ಧ ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು, ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮಾರ್ಚ್‌ 2ರಂದು ಎಫ್ಐಆರ್ ದಾಖಲಿಸಿದ್ದರು. ಲಂಚದ ಹಣ ಸ್ವೀಕರಿಸುವಾಗಲೇ ಪ್ರಶಾಂತ್ ಅವರನ್ನು ವಶಕ್ಕೆ ಪಡೆದಿದ್ದರು.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement