ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ: ಬಂಡೀಪುರ ಪರಿಸರ ವಲಯ ನಿಗಾ ಸಮಿತಿಗೆ ಉತ್ತರಿಸಲು ನಟ ಗಣೇಶಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿ ಬರುವ ತಮ್ಮ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ಏಳು ದಿನಗಳಲ್ಲಿ ನಟ ಗಣೇಶ ಉತ್ತರ ನೀಡಬೇಕು ಹಾಗೂ ಇದಾದ ನಾಲ್ಕು ವಾರಗಳಲ್ಲಿ ಸಮಿತಿ ನಿರ್ಧಾರ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.
ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿ ಈಗ ನಿರ್ಬಂಧ ವಿಧಿಸಿರುವ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರ ನೋಟಿಸ್‌ ವಜಾ ಮಾಡುವಂತೆ ಕೋರಿ ನಟ ಗಣೇಶ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರು ಸಲ್ಲಿಸಲು ಸೂಚಿಸಿರುವ ದಾಖಲೆಗಳನ್ನು ನಟ ಗಣೇಶ ಏಳು ದಿನಗಳಲ್ಲಿ ಸಲ್ಲಿಸಬೇಕು. ಇದಾದ ನಾಲ್ಕು ವಾರಗಳಲ್ಲಿ ಸಂಬಂಧಿತ ಅಧಿಕಾರಿ ಕ್ರಮಕೈಗೊಳ್ಳಬೇಕು” ಎಂದು ನ್ಯಾಯಾಲಯವು ಆದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಪ್ರಕರಣದ ಹಿನ್ನೆಲೆ: ಕಳೆದ ವರ್ಷ ನಟ ಗಣೇಶ ಅವರು ಬಂಡೀಪುರ ಅರಣ್ಯದ ಕುಂದುಕರೆ ವ್ಯಾಪ್ತಿಯ ಜಕ್ಕಳಿ ಗ್ರಾಮದಲ್ಲಿ 1.24 ಎಕರೆ ಜಮೀನು ಖರೀದಿಸಿದ್ದು, ಅಲ್ಲಿ ಫಾರ್ಮ್‌ ಹೌಸ್‌ ನಿರ್ಮಿಸುವ ಸಂಬಂಧ ಅನುಮತಿ ಕೋರಿ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಸಮಿತಿಯು ಷರತ್ತುಗಳನ್ನು ವಿಧಿಸಿ, ತಾತ್ಕಾಲಿಕ ವಾಸದ ಮನೆ ಕಟ್ಟಡ ನಿರ್ಮಿಸಲು ನಿಯಮಾನುಸಾರ ನಡೆದುಕೊಳ್ಳುವ ಕುರಿತು ಮುಚ್ಚಳಿಕೆ ಬರೆಸಿಕೊಂಡು ಅನುಮತಿಸಿತ್ತು.
ಆನಂತರ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸದರಿ ಜಾಗದಲ್ಲಿ ಜೆಸಿಬಿ ಬಳಕೆ ಮಾಡಿ ಸಮತಟ್ಟು ಮಾಡಿ, ಬೃಹತ್‌ ಕಟ್ಟಡ ನಿರ್ಮಾಣಕ್ಕೆ ತಯಾರಿ ನಡೆಸುತ್ತಿರುವುದು ಕಂಡುಬಂದಿದ್ದು, ಕೂಡಲೇ ಕಾಮಗಾರಿ ಸ್ಥಗಿತಗೊಳಿಸಲು ಹಾಗೂ ನಿಯಮಾನುಸಾರ ಕ್ರಮಕೈಗೊಳ್ಳಬೇಕು ಎಂದು ಸೂಚಿಸಲಾಗಿತ್ತು.
ಸಮಿತಿ ಸಭೆಯಲ್ಲಿನ ನಿರ್ಬಂಧ ಹಾಗೂ ಮುಚ್ಚಳಿಕೆ ಪತ್ರದಲ್ಲಿ ಬರೆದುಕೊಟ್ಟಿರುವ ಷರತ್ತುಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ. ಆದ್ದರಿಂದ ಕೂಡಲೇ ಸದರಿ ಕಟ್ಟಡಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲಾತಿ ಅಂದರೆ ಕಟ್ಟಡದ ಅನುಮೋದಿತ ನೀಲನಕ್ಷೆ, ಕಂದಾಯ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳ ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಪಡೆದಿರುವ ಅನುಮೋದಿತ ದಾಖಲೆಗಳನ್ನು ಏಳುದಿನಗಳ ಒಳಗೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಯ ಮುಂದೆ ಹಾಜರುಪಡಿಸಬೇಕು. ಮುಂದಿನ ಆದೇಶದವರೆಗೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆದೇಶಿಸಿದ್ದರು. ಈ ಆದೇಶ ವಜಾ ಮಾಡಬೇಕು ಎಂದು ಕೋರಿ ನಟ ಗಣೇಶ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement