ಇಂದಿನಿಂದ ಬೆಂಗಳೂರಲ್ಲಿ ಮತ್ತೆ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿ..!

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ತಹಬದಿಗೆ ತರಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ಬಿಬಿಎಂಪಿ ಇಂದಿನಿಂದ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿಗೆ ಮುಂದಾಗಿದೆ.
ಇಲ್ಲಿಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿದ್ದರೂ ಯಾರೂ ಪಾಲನೆ ಮಾಡುತ್ತಿರಲಿಲ್ಲ. ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸಹ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಸೋಂಕು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ನಗರದಲ್ಲೂ ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಬಿಬಿಎಂಪಿ ಹಾಗೂ ಪೊಲೀಸ್‌ ಇಲಾಖೆ ಇಂದಿನಿಂದಲೇ ಕಠಿಣ ನೈಟ್ ಕರ್ಫ್ಯೂ ಜಾರಿಗೆ ಮುಂದಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಕರ್ಫ್ಯೂ ಉಲ್ಲಂಘಿಸಿ ಓಡಾಡುವವರ ವಿರುದ್ಧ ದಂಡ ಪ್ರಯೋಗಿಸಲು ಬಿಬಿಎಂಪಿ ಹಾಗೂ ಪೊಲೀಸರು ಮುಂದಾಗಿದ್ದಾರೆ. ವಿನಾಕಾರಣ ರಾತ್ರಿ ವೇಳೆ ಓಡಾಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.
ನೈಟ್ ಕರ್ಫ್ಯೂ ಕಟ್ಟುನಿಟ್ಟಿನ ಜಾರಿಗೆ ಪೊಲೀಸರು ಮತ್ತು ಮಾರ್ಷಲ್‍ಗಳು ರಾತ್ರಿ ವೇಳೆ ರೋಡಿಗಿಳಿಯಲಿದ್ದು, ಕರ್ಫ್ಯೂ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡಿದರೆ ಭಾರೀ ತೊಂದರೆ ಎದುರಿಸಬೇಕಾಗುತ್ತದೆ. ವಿನಾಯಿತಿ: ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳು, ಅಗತ್ಯ ವಸ್ತುಗಳ ಸರಬರಾಜು, ವೈದ್ಯಕೀಯ ಸೇವೆಗಳ ವಾಹನಗಳಿಗೆ ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ನೈಟ್‍ಶಿಫ್ಟ್ ಕೆಲಸ ಮಾಡುವ ಸಿಬ್ಬಂದಿ ತಮ್ಮ ಸಂಸ್ಥೆಯ ಐಡಿ ಕಾರ್ಡ್ ತೋರಿಸಿ ಓಡಾಡಲು ಅವಕಾಶ ಕಲ್ಪಿಸಲಾಗಿದೆ. ಇದರ ಜತೆಗೆ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವವರಿಗೆ ಅನುಮತಿ ನೀಡಲಾಗಿದೆ.

ಪ್ರಮುಖ ಸುದ್ದಿ :-   ಬಂಟ್ವಾಳ | ಯುವತಿಗೆ ಇರಿದು ನಂತ್ರ ಆತ್ಮಹತ್ಯೆಗೆ ಶರಣಾದ ಯುವಕ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement