ಬೆಂಗಳೂರು: ಆಡಳಿತ ವೆಚ್ಚಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಚಿವಾಲಯ ಹಂತದ 2,000 ಹುದ್ದೆಗಳನ್ನುರದ್ದು ಪಡಿಸುವ ಮಹತ್ವದ ತೀರ್ಮಾನವನ್ನು ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಕೈಗೊಂಡಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳ ವಿಲೀನ, ರದ್ಧತಿ ಬಗ್ಗೆ ಹಾಗೂ ನಾನಾ ಇಲಾಖೆಗಳಲ್ಲಿ ಮಂಜೂರಾಗಿರುವ ನಾನಾ ವೃಂದದ ವೈಜ್ಞಾನಿಕ ಪರಿಷ್ಕರಣೆ, ಹುದ್ದೆಗಳ ರದ್ದತಿ, ಹಾಗೂ 6ನೇ ವೇತನ ಆಯೋಗದ ಶಿಫಾರಸುಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ಉಪಸಮಿತಿಗೆ ಸರಕಾರ ವಹಿಸಿತ್ತು. ಈ ಸಮಿತಿ ಮಂಗಳವಾರ ಸಭೆ ನಡೆಸಿ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿದೆ.
ಕೃಷಿ ಇಲಾಖೆಯ ಮೂರು ನಿಗಮಗಳನ್ನು ರದ್ದು ಪಡಿಸುವುದು; ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆ ಇಲಾಖೆಯ ವಿಲೀನ; ಏಳು ಅಭಿವೃದ್ಧಿ ಪ್ರಾಧಿಕಾರಗಳನ್ನು ರದ್ದು ಪಡಿಸುವ ನಿರ್ಧಾರಗಳನ್ನು ಸಂಪುಟ ಉಪಸಮಿತಿ ಕೈಗೊಂಡಿದೆ.
ಸಭೆ ಬಳಿಕ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ‘‘ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳು ಕೃಷಿ ಸಂಬಂಧಿತ ಚಟುವಟಿಕೆಗಳಲ್ಲೇ ತೊಡಗಿಸಿಕೊಂಡಿರುವುದರಿಂದ ಮೂರನ್ನೂ ಒಂದೇ ಸಚಿವಾಲಯದಡಿ ತರುವ ಚಿಂತನೆ ಇದೆ. ಮೂರು ಇಲಾಖೆಗಳಿಂದ ಒಟ್ಟು 2000ಕ್ಕೂ ಹೆಚ್ಚು ಹುದ್ದೆ ರದ್ದುಪಡಿಸಲು ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಹೇಳಿದರು.
ಕೃಷಿ ಇಲಾಖೆ ವ್ಯಾಪ್ತಿಯಲ್ಲಿರುವ ಕರ್ನಾಟಕ ಕೃಷಿ ಕೈಗಾರಿಕೆ ನಿಗಮ, ಕರ್ನಾಟಕ ಆಹಾರ ನಿಗಮ ಹಾಗೂ ಮೈಸೂರು ತಂಬಾಕು ಕಂಪನಿ ರದ್ದುಪಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ಇಲಾಖೆಯೂ ಒಪ್ಪಿಗೆ ನೀಡಿದ್ದು, ಮೂರೂ ಇಲಾಖೆಯಲ್ಲಿ ಬೇರೆಬೇರೆ ಕಾರಣಗಳಿಗೆ ಸಮಾನ ಸ್ಥಾನಮಾನ ಕಲ್ಪಿಸಲು ಸೃಜನೆಯಾಗಿರುವ ಉನ್ನತ ಶ್ರೇಣಿಯ ಹುದ್ದೆಗಳನ್ನು ರದ್ದುಪಡಿಸಲು ತೀರ್ಮಾನಿಸಲಾಗಿದೆ ಎಂದು ಅಶೋಕ ತಿಳಿಸಿದರು.
ಬೆಂಗಳೂರಿನ ಸುತ್ತಮುತ್ತ ನೆಲಮಂಗಲ, ಮಾಗಡಿ, ರಾಮನಗರ, ಚನ್ನಪಟ್ಟಣ, ಕನಕಪುರ, ಸಾತನೂರು, ವಿಮಾನನಿಲ್ದಾಣ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ 10 ಅಭಿವೃದ್ಧಿ ಪ್ರಾಧಿಕಾರಗಳಿವೆ. ಇವುಗಳ ಪೈಕಿ ಏಳು ಪ್ರಾಧಿಕಾರಗಳನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ. ಜಿಲ್ಲೆಗೆ ಒಂದು ಪ್ರಾಧಿಕಾರವಿರುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಮುದ್ರಣ, ಲೇಖನ ಸಾಮಗ್ರಿ, ಪ್ರಕಟಣೆ ಇಲಾಖೆಯನ್ನು ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸಲು ನಿರ್ಧರಿಸಲಾಗಿದ್ದು, ಕೆಳ ಹಂತದ ಅಧಿಕಾರಿ, ನೌಕರ, ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳ್ಳಲಿದ್ದಾರೆ. ಅಲ್ಲದೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವನ್ನು ಪ್ರವಾಸೋದ್ಯಮ ಇಲಾಖೆಯಲ್ಲಿ ವಿಲೀನಗೊಳಿಸಲಾಗುವುದು ಎಂದರು.
ಅರಣ್ಯ ಇಲಾಖೆಯಲ್ಲಿ ಜಿಲ್ಲೆಗೆ ಇಬ್ಬರು, ಮೂವರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಡಿಸಿಎಫ್) ಹಾಗೂ ತಾಲೂಕಿಗೆ ಇಬ್ಬರು, ಮೂವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿದ್ದಾರೆ(ಎಸಿಎಫ್). ಅರಣ್ಯ, ಸಾಮಾಜಿಕ ಅರಣ್ಯಕ್ಕೆ ಪ್ರತ್ಯೇಕವಾಗಿ ಉನ್ನತ ಶ್ರೇಣಿ ಅಧಿಕಾರಿಗಳಿದ್ದಾರೆ. ಅರಣ್ಯ ಪ್ರದೇಶ ಹೆಚ್ಚಾಗಿರುವೆಡೆ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿ ಉಳಿದೆಡೆ ಅಗತ್ಯಕ್ಕೆ ತಕ್ಕಂತೆ ನಿಯೋಜಿಸಲು ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು.
ಅರಣ್ಯ ಇಲಾಖೆಯಲ್ಲಿ ಕೆಳಹಂತದ ನೌಕರರ ಅಗತ್ಯ ಹೆಚ್ಚಿದೆ. ಹೀಗಾಗಿ, ಅನಗತ್ಯವಾಗಿರುವ ಹುದ್ದೆಗಳನ್ನು ರದ್ದುಪಡಿಸಿ ಕೆಳಹಂತದ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲು ಒತ್ತು ನೀಡಲಾಗುವುದು. ಈ ಕುರಿತು ಮುಂದಿನ ಸಭೆಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಮದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ