ಶಿವಮೊಗ್ಗ ಕೃಷಿ ವಿವಿಗೆ ‘ಶಿವಪ್ಪ ನಾಯಕ ಕೃಷಿ ವಿವಿ’ ಎಂದು ನಾಮಕರಣ: ಬಿಎಸ್‌ವೈ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಿದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ 1,074 ಕೋಟಿ ವೆಚ್ಚದ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಉದ್ಘಾಟಿಸಿ ಮತ್ತು 560 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕು ಸ್ಥಾಪನೆ ವರ್ಚುವಲ್ ವೇದಿಕೆ ಮೂಲಕ ಶನಿವಾರ ನೆರವೇರಿಸಿ ಅವರು ಮಾತನಾಡಿದರು.
ಮಲೆನಾಡು, ಕರಾವಳಿ, ಬಯಲುಸೀಮೆ ಏಳು ಜಿಲ್ಲೆಗಳ ವ್ಯಾಪ್ತಿಗೆ ಸೀಮಿತಗೊಂಡು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೆಲಸ ಮಾಡುತ್ತಿದ್ದು ಇದು ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ವಿಜ್ಞಾನ ಹೊಂದಿರುವ ರಾಜ್ಯದ ಏಕೈಕ ಸಮಗ್ರ ಹಾಗೂ ವಿಶಿಷ್ಟ ವಿಶ್ವವಿದ್ಯಾಲ. 155 ಕೋಟಿ ರೂ. ವೆಚ್ಚದಲ್ಲಿ ನೂತನ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. 787 ಎಕರೆ ಜಮೀನು ಮಂಜೂರು ಮಾಡಲಾಗಿದೆ’ ಎಂದರು.
ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಗೆ ಪ್ರಯತ್ನ: ‘ಎರಡು ವರ್ಷಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಗರಿಷ್ಠ ಪ್ರಯತ್ನ ಮಾಡಿದ ತೃಪ್ತಿ ನನಗಿದೆ. ನನಗೆ ರಾಜಕೀಯ ಜನ್ಮ ನೀಡಿದ ಶಿವಮೊಗ್ಗ ಜಿಲ್ಲೆ ಜನತೆ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ’ ಎಂದರು.
ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನ ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣ ಬದಲಾಯಿಸುವ ವಿಶ್ವಾಸವಿದೆ’ ಎಂದರು.
ಶಿವಮೊಗ್ಗ ತಾಲ್ಲೂಕಿನ ಸೋಗಾನೆಯಲ್ಲಿ ಏರ್‌ ಬಸ್‌ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂಥ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಮುಂದಿನ ಏಪ್ರಿಲ್ ವೇಳೆಗೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ ಎಂದರು.
ರಾಜ್ಯದ ಕೆಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಶಿವಮೊಗ್ಗ ಸೇರಿ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿ, ಜನರ ರಕ್ಷಣೆ, ಪರಿಹಾರ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದೇನೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಭಾನುವಾರ (ಜುಲೈ 25) ಬೆಳಗಾವಿಗೆ ತೆರಳಲಿದ್ದೇನೆ’ ಎಂದು ಅವರು ಹೇಳಿದರು.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಬಿ.ಸಿ. ಪಾಟೀಲ, ಭೈರತಿ ಬಸವರಾಜ್, ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಇದ್ದರು.

ಪ್ರಮುಖ ಸುದ್ದಿ :-   ಲೌಡ್ ಸ್ಪೀಕರಿನಲ್ಲಿ ಹನುಮಾನ ಚಾಲೀಸಾ ಹಾಕಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಮೂವರ ಬಂಧನ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement