ಟಿ20 ವಿಶ್ವಕಪ್‌ನಲ್ಲಿ ಭಾರತದಲ್ಲಿ ನಡೆಯುವ ತನ್ನ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೊರೆ..?

ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ಕ್ರಿಕೆಟ್ ಮೈದಾನಕ್ಕೂ ವ್ಯಾಪಿಸಿದೆ. ಐಪಿಎಲ್ 2026ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡಬೇಕಿದ್ದ ಬಾಂಗ್ಲಾದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಒಪ್ಪಂದದಿಂದ ಮುಕ್ತಗೊಳಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ, ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳ ಸ್ಥಳಾಂತರಕ್ಕೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಮುಂದಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಅಸ್ಥಿರತೆಯ ಹಿನ್ನೆಲೆಯಲ್ಲಿ, ಮುಸ್ತಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ ಕೆಕೆಆರ್ ತಂಡಕ್ಕೆ ನಿರ್ದೇಶನ ನೀಡಿದೆ. ಅದರ ನಂತರ ಭಾರತದಲ್ಲಿ ತಮ್ಮ ಆಟಗಾರರ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಾಂಗ್ಲಾ ಕ್ರಿಕೆಟ್ ಮಂಡಳಿ, ವಿಶ್ವಕಪ್ ಪಂದ್ಯಗಳನ್ನು ಭಾರತದ ಹೊರಗೆ ನಡೆಸುವಂತೆ ಐಸಿಸಿ (ICC) ಗೆ ಮನವಿ ಮಾಡಲು ನಿರ್ಧರಿಸಿದೆ.
ಬಾಂಗ್ಲಾದೇಶವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ವೆಸ್ಟ್ ಇಂಡೀಸ್, ಇಟಲಿ ಮತ್ತು ಇಂಗ್ಲೆಂಡ್ ವಿರುದ್ಧ ಹಾಗೂ ಮುಂಬೈನ ವಾಂಖೆಡೆಯಲ್ಲಿ ನೇಪಾಳ ವಿರುದ್ಧ ಆಡಬೇಕಿದೆ. ಈ ಪಂದ್ಯಗಳನ್ನು ಬದಲಿಸಲು ಬೇಡಿಕೆ ಇಡಲಾಗಿದೆ.

ಪ್ರಮುಖ ಸುದ್ದಿ :-   ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಬಿಸಿಸಿಐ ಮತ್ತು ಕೆಕೆಆರ್ ಪ್ರತಿಕ್ರಿಯೆ
ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾತನಾಡಿ, “ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅಶಾಂತಿಯ ಹಿನ್ನೆಲೆಯಲ್ಲಿ ಮುಸ್ತಫಿಜುರ್ ಅವರನ್ನು ಬಿಡುಗಡೆ ಮಾಡಲು ಕೆಕೆಆರ್ ತಂಡಕ್ಕೆ ಸೂಚಿಸಲಾಗಿದೆ. ಅವರ ಬದಲಿಗೆ ಬೇರೆ ಆಟಗಾರನನ್ನು ಆಯ್ಕೆ ಮಾಡಿಕೊಳ್ಳಲು ತಂಡಕ್ಕೆ ಅವಕಾಶ ನೀಡಲಾಗುವುದು,” ಎಂದು ತಿಳಿಸಿದ್ದಾರೆ. ಕೆಕೆಆರ್ ಫ್ರಾಂಚೈಸಿ ಕೂಡ ಅಧಿಕೃತವಾಗಿ ಮುಸ್ತಫಿಜುರ್ ಬಿಡುಗಡೆ ಮಾಡುವುದನ್ನು ಖಚಿತಪಡಿಸಿದೆ.

ಬಿಕ್ಕಟ್ಟಿಗೆ ಕಾರಣವೇನು?
ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ದಂಗೆ ಮತ್ತು ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಲ್ಲೆಗಳಿಂದಾಗಿ ಉಭಯ ದೇಶಗಳ ಸಂಬಂಧ ಹದಗೆಟ್ಟಿದೆ. ಪಾಕಿಸ್ತಾನದಲ್ಲಿ ನಡೆಯಲಿರುವ 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಯಾಣಿಸಲು ನಿರಾಕರಿಸಿದ ಮಾದರಿಯಲ್ಲೇ, ಈಗ ಬಾಂಗ್ಲಾದೇಶ ಕೂಡ ಭಾರತದಲ್ಲಿ ಆಡಲು ಹಿಂಜರಿಯುತ್ತಿದೆ.
“ವಿಶ್ವಕಪ್ ಐಸಿಸಿ ಆಯೋಜಿಸುವ ಟೂರ್ನಿಯಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರವನ್ನು ಐಸಿಸಿ ತೆಗೆದುಕೊಳ್ಳಲಿದೆ, ಎಂದು ಬಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಸ್ತಫಿಜುರ್ ರೆಹಮಾನ್ ಅವರನ್ನು ಇತ್ತೀಚಿನ ಹರಾಜಿನಲ್ಲಿ ಕೆಕೆಆರ್ ತಂಡ 9.2 ಕೋಟಿ ರೂ. ನೀಡಿ ಖರೀದಿಸಿತ್ತು. ಇದು ಬಾಂಗ್ಲಾ ಆಟಗಾರನೊಬ್ಬನಿಗೆ ಸಿಕ್ಕ ಅತ್ಯಧಿಕ ಮೊತ್ತವಾಗಿತ್ತು. ಪ್ರಸ್ತುತ ಬೆಳವಣಿಗೆಯಿಂದಾಗಿ ಭಾರತ ಮತ್ತು ಬಾಂಗ್ಲಾದೇಶ ನಡುವೆ 2026ರ ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ ದ್ವಿಪಕ್ಷೀಯ ಸರಣಿಯೂ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.

ಪ್ರಮುಖ ಸುದ್ದಿ :-   ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement