ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಹಾಗೂ ಮೀಸಲಾತಿ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕರ್ನಾಟಕ ಬಿಜೆಪಿ ಶನಿವಾರ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಸಿಖ್ ಸಮುದಾಯದ ಬಗ್ಗೆ ದೂಷಣೆ ಹಾಗೂ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಮೀಸಲಾತಿ ಕುರಿತು ನೀಡಿದ ಹೇಳಿಕೆ ಬಗ್ಗೆ ರಾಹುಲ್ ಗಾಂಧಿ ವಿರುದ್ಧ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯ ಪಕ್ಷದ ಘಟಕವು ಕೋರಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ಇರುವವರೆಗೆ, ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ಕೊನೆಗೊಳಿಸುವ ಅವರ ಯೋಜನೆಯಲ್ಲಿ ಕಾಂಗ್ರೆಸ್ ನಾಯಕರು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಸಿಖ್ಖರ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?
ಸೆಪ್ಟೆಂಬರ್ 9 ರಂದು ವರ್ಜೀನಿಯಾದ ಹೆರಂಡನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಗಾಂಧಿ, ಭಾರತದಲ್ಲಿ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಮಾತನಾಡಲು ಪ್ರಯತ್ನಿಸಿದರು “(ಭಾರತದಲ್ಲಿ) ಸಿಖ್ಖರಿಗೆ ಪೇಟವನ್ನು ಧರಿಸಲು ಅವಕಾಶ ನೀಡಲಾಗುತ್ತದೆಯೇ … ಎಂದು ಅವರು ಕೇಳಿದ್ದರು.
ಅವರ ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿ, ಭಾರತದಲ್ಲಿ ಯಾವುದೇ ಸಿಖ್ಖರು ಹೆಮ್ಮೆಯಿಂದ ದಸ್ತರ್ (ಟರ್ಬನ್), ಕರ (ಉಕ್ಕಿನ ಬಳೆ) ಧರಿಸಬಹುದು ಮತ್ತು ಕಿರ್ಪಾನ್ (ಧಾರ್ಮಿಕ ಕಠಾರಿ) ಧರಿಸಬಹುದು ಎಂದು ಹೇಳಿದೆ. ಸಿಖ್ಖರ ನಿಯೋಗವೊಂದು ದೆಹಲಿಯಲ್ಲಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರನ್ನು ಭೇಟಿ ಮಾಡಿ, ಅಮೆರಿಕದಲ್ಲಿ ಸಿಖ್ಖರ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ