ರೈತ ಸಂಘಟನೆಗಳಿಂದ ಸೆಪ್ಟೆಂಬರ್ 27ರಂದು ಭಾರತ್ ಬಂದ್‌: ಕಾಂಗ್ರೆಸ್‌ ಬೆಂಬಲ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ಸೆಪ್ಟೆಂಬರ್ 27ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದು, ಈ ಬಂದ್‌ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ಪ್ರಕಟಿಸಿದೆ.
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ಘೋಷಣೆ ಮಾಡಿದ್ದು, 300ಕ್ಕೂ ಅಧಿಕ ಸಂಘಟನೆಗಳು ಈಗಾಗಲೇ ಬಂದ್ ಬೆಂಬಲಿಸಿವೆ.
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರ್ಣಗೊಳಿಸುತ್ತಿದೆ. ಆದ್ದರಿಂದ ಸಂಘಟನೆಗಳು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ತೀರ್ಮಾನ ಕೈಗೊಂಡಿವೆ. ಸೆಪ್ಟೆಂಬರ್ 27ರ ಬಂದ್ ಅಂಗವಾಗಿ ವಿವಿಧ ರಾಜ್ಯಗಳಲ್ಲಿ ರೈತ ಮಹಾ ಪಂಚಾಯತ್ ಆಯೋಜನೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯ ನೇತೃತ್ವವನ್ನು ದಿಗ್ವಿಜಯ್ ಸಿಂಗ್‌ಗೆ ನೀಡಲಾಗಿದೆ. ಕಾಂಗ್ರೆಸ್ ಮಾತ್ರವಲ್ಲ ಸಿಪಿಐ(ಎಂ), ಸಿಪಿಐ, ಆರ್‌ಎಸ್‌ಪಿ ಸೇರಿದಂತೆ ಎಡ ಪಕ್ಷಗಳು ಸಹ ಭಾರತ್ ಬಂದ್‌ಗೆ ಬೆಂಬಲ ನೀಡಿವೆ. ಮೋದಿ ಮತ್ತು ಯೋಗಿ ಸರ್ಕಾರಕ್ಕೆ ರೈತರ ಶಕ್ತಿ ಏನೆಂದು ತೋರಿಸುತ್ತೇವೆ ಎಂದು ರೈತ ಸಂಘಟನೆಗಳು ಹೇಳಿವೆ.
ದೆಹಲಿ ಹೊರವಲಯದಲ್ಲಿ ಸುಮಾರು 9 ತಿಂಗಳಿನಿಂದ ರೈತರು ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಕಾಯ್ದೆಯಲ್ಲಿ ತಿದ್ದುಪಡಿ ತರುವುದು ಬೇಡ. ಸಂಪೂರ್ಣ ರದ್ದು ಮಾಡಿ ಎಂಬುದು ರೈತ ಸಂಘಟನೆಗಳ ಬೇಡಿಕೆ. ಸರ್ಕಾರದ ಪ್ರತಿನಿಧಿಗಳು ರೈತ ಸಂಘಟನೆಗಳ ಜೊತೆ ನಡೆಸಿದ 11 ಸಭೆಗಳು ವಿಫಲವಾಗಿವೆ.
ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಭಾನುವಾರ ಕಿಸಾನ್ ಮಹಾ ಪಂಚಾಯತ್ ಆಯೋಜನೆ ಮಾಡಲಾಗಿತ್ತು. 15 ರಾಜ್ಯಗಳ 300ಕ್ಕೂ ಹೆಚ್ಚು ಸಂಘಟನೆಗಳು ಇದರಲ್ಲಿ ಪಾಲ್ಗೊಂಡಿತ್ತು. ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು,ಇದರ ಬೆನ್ನಿಗೇ ರೈತರ ಹೋರಾಟ ತೀವ್ರಗೊಳ್ಳುತ್ತಿದೆ.
ಈ ಮಧ್ಯೆ ಬಿಜೆಪಿ ಸಂಸದ ವರುಣ್‌ ಗಾಂಧಿ ಭಾನುವಾರ ರೈತರು ನಮ್ಮದೇ ರಕ್ತ -ಮಾಂಸ ಹಂಚಿಕೊಂಡಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಟ್ವೀಟ್‌ ಮಾಡಿದ್ದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ನಿವೃತ್ತ ನ್ಯಾಯಮೂರ್ತಿಗಳು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement