ಬೆಂಗಳೂರು: ಗ್ರಾಮ ಪಂಚಾಯತ, ತಾಲ್ಲೂಕು ಹಗೂ, ಜಿಲ್ಲಾ ಪಂಚಾಯತ ಕ್ಷೇತ್ರಗಳ ಮೀಸಲಾತಿ ನಿಗದಿ ಹಾಗೂ ಕ್ಷೇತ್ರ ವಿಂಗಡಣೆ ಅಧಿಕಾರವನ್ನು ರಾಜ್ಯ ಚುನಾವಣೆ ಆಯೋಗದಿಂದ ಹಿಂಪಡೆದು, ರಾಜ್ಯ ಸರ್ಕಾರ ತನ್ನಲ್ಲೇ ಉಳಿಸಿಕೊಳ್ಳುವ ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಕಾಂಗ್ರೆಸ್ ಹಾಗೂ ಜೆಡಿಸ್ ಸದಸ್ಯರ ಸಭಾತ್ಯಾಗದ ನಡುವೆ ಅಂಗೀಕಾರ ದೊರೆಯಿತು.
ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕವನ್ನು ಯಥಾವತ್ತಾಗಿ ಇಂದು (ಶುಕ್ರವಾರ) ವಿಧಾನ ಪರಿಷತ್ನಲ್ಲಿ ಮಂಡಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಂಗೀಕಾರಕ್ಕೆ ಮನವಿ ಮಾಡಿದರು.
ಚರ್ಚೆಯಲ್ಲಿ ಉತ್ತರ ನೀಡಿದ ಸಚಿವ ಈಶ್ವರಪ್ಪ, ಪಂಚಾಯತ್ ರಾಜ್ ಸಂಸ್ಥೆಗಳ ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ 2600 ತಕರಾರು ಅರ್ಜಿಗಳು ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿವೆ. ಕ್ಷೇತ್ರ ಪುನರ್ ವಿಂಗಡಣೆಯ ಲೋಪಗಳನ್ನು ಸರಿ ಪಡಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ ಎಂದರು.
ಎಸ್.ಆರ್.ಪಾಟೀಲ್ ಅವರು ನಾವು ಹೇಳಿದ ಮಾತುಗಳನ್ನು ಮನವರಿಕೆ ಮಾಡಿಕೊಂಡು ವಿಧೇಯಕವನ್ನು ಹಿಂಡೆಯುತ್ತಾರೆ ಎಂದುಕೊಂಡಿದ್ದೆವು. ಆದರೂ ಸರ್ಕಾರ ಮೊಂಡುತನದಿಂದ ವಿಧೇಯಕ ಅಂಗೀಕಾರ ಪಡೆಯಲು ಮುಂದಾಗಿದೆ ಎಂದು ಆಕ್ಷೇಪಿಸಿ ಸಭಾತ್ಯಾಗ ಮಾಡಿದರು. ನಂತರ ಧ್ವನಿಮತದ ಮೂಲಕ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.
ನಿಮ್ಮ ಕಾಮೆಂಟ್ ಬರೆಯಿರಿ