ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ವು ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 2000 ವಿಶೇಷ ಬಸ್ಸುಗಳನ್ನು ಓಡಿಸಲಿದೆ.
ಬೆಂಗಳೂರಿನಿಂದ ವಿವಿಧ ಕಡೆ ಸಂಚರಿಸುವ ಪ್ರಯಾಣಿಕರಿಗೆ ನವೆಂಬರ್ 10, 11 ಹಾಗೂ 12 ರಂದು ಮೂರು ದಿನ (ಶುಕ್ರವಾರ, ಶನಿವಾರ ಹಾಗೂ ಭಾನುವಾರ) ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿವಿಧ ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಿಂದ ವಿಶೇಷ ಬಸ್ ಸಂಚರಿಸಲಿವೆ. ಪ್ರಯಾಣಿಕರು ಮುಂಗಡ ಬುಕ್ಕಿಂಗ್ ಮಾಡಿಕೊಂಡು ಅಥವಾ ನಿಲ್ದಾಣಗಳಲ್ಲಿ ಬಂದು ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ.
ಹಬ್ಬ ಮುಗಿದ ನಂತರವೂ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗಾಗಿ ಜಿಲ್ಲಾ ಕೇಂದ್ರ, ಪ್ರಮುಖ ನಗರ, ಪಟ್ಟಣಗಳಿಂದ ನವೆಂಬರ್ 14 ಮತ್ತು 15 ರಂದು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಯಾವ ನಿಲ್ದಾಣದಿಂದ ಯಾವ ಕಡೆಗೆ ಬಸ್?
ಕೆಂಪೇಗೌಡ ಬಸ್ ನಿಲ್ದಾಣ – ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚರಿಸಲಿವೆ.
ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣ – ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹೋಗುವ ಬಸ್ಸುಗಳು ಹೊರಲಿವೆ.
ಶಾಂತಿನಗರ ಬಸ್ ನಿಲ್ದಾಣ – ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಬಸ್ಸುಗಳು ಹೊರಡಲಿವೆ.
ರಿಯಾಯಿತಿ
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಲಾಗಿದೆ. ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಪ್ರಯಾಣಿಕರು www.ksrtc.karnataka.gov.in ವೆಬ್ ಸೈಟ್ ಮೂಲಕ ಇ-ಟಿಕೇಟ್ ಬುಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್ಸೈಟ್ನಲ್ಲಿ ಮಾಹಿತಿ ನೀಡಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
ಇದರ ಹೊರತಾಗಿ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಬೇಡಿಕೆಗೆ ಅನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ