ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟಿದ್ದ ಯುವಕ

ವಿಜಯನಗರ: ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಹೆತ್ತ ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿ, ಮನೆಯೊಳಗೆ ಹೂತು ಹಾಕಿರುವ ಅಮಾನುಷ ಕೃತ್ಯ ವಿಜಯನಗರ ಜಿಲ್ಲೆಯ ಕೋಟೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡಕಿಟ್ಟದಹಳ್ಳಿ ಮೂಲದ ಅಕ್ಷಯಕುಮಾರ ಎಂಬಾತನೇ ಈ ಪೈಶಾಚಿಕ ಕೃತ್ಯ ಎಸಗಿದ ಆರೋಪಿ. ಈತ ತನ್ನ ತಂದೆ ಭೀಮರಾಜ, ತಾಯಿ ಜಯಲಕ್ಷ್ಮಿ ಮತ್ತು ತಂಗಿ ಅಮೃತಾ ಎಂಬುವವರನ್ನು ಜನವರಿ 27 ರಂದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕೋಟೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ಕುಟುಂಬ, ಟೈರ್ ರಿಟ್ರೇಡಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು.

ಪೊಲೀಸರ ಹಾದಿ ತಪ್ಪಿಸಲು ಯತ್ನ:
ಕೊಲೆ ಮಾಡಿದ ನಂತರ ಏನೂ ಅರಿಯದವನಂತೆ ಬೆಂಗಳೂರಿಗೆ ತೆರಳಿದ ಅಕ್ಷಯ, ಅಲ್ಲಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ತನ್ನ ತಂದೆ-ತಾಯಿ ಮತ್ತು ತಂಗಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಅಕ್ಷಯನ ನಡವಳಿಕೆಯ ಮೇಲೆ ಅನುಮಾನ ಬಂದಿದೆ. ಸತತ ವಿಚಾರಣೆಗೆ ಒಳಪಡಿಸಿದಾಗ, ತಾನೇ ಮೂವರನ್ನು ಕೊಲೆ ಮಾಡಿ ಮನೆಯೊಳಗೆ ಹೂತು ಹಾಕಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP)ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಮುಂದುವರಿದಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement