ಭಟ್ಕಳ ತಹಶೀಲ್ದಾರ ಕಚೇರಿಗೆ ಬಾಂಬ್‌ ಬೆದರಿಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಹಶೀಲ್ದಾರ ಕಚೇರಿಗೆ ಮಂಗಳವಾರ ಬೆಳಗ್ಗೆ  ಬಾಂಬ್‌ ಸ್ಪೋಟವಾಗಲಿದೆ ಎಂದು ಬೆದರಿಕೆ ಕರೆ ಬಂದಿದ್ದು, ಕಚೇರಿ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು.
“ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ” ([email protected]) ಎಂಬ ಇಮೇಲ್ ಐಡಿಯಿಂದ ಕಳುಹಿಸಲಾಗಿದೆ ಎಂದು ತಿಳಿದುಬಂದಿದ್ದು, ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು: ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ಬೇಗ ತೆರವುಗೊಳಿ! ಎಂದು ಕನ್ನಡದಲ್ಲಿ ಎಚ್ಚರಿಕೆ ನೀಡಲಾಗಿದೆ. ಬೆಳಗ್ಗೆ 7:25ರ ಸುಮಾರಿಗೆ ಸಂದೇಶ ಕಳುಹಿಸಲಾಗಿದೆ ಎನ್ನಲಾಗಿದೆ.
ಅನಾಮಿಕ ವ್ಯಕ್ತಿ ಕಳುಹಿಸಿದ ಇ-ಮೇಲ್‌ನಲ್ಲಿ ಬಾಂಬ್ ಬೆದರಿಕೆ ಮಾತ್ರವಲ್ಲದೆ ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿದೆ. ಇಬ್ಬರು ರಾಜಕೀಯ ತಂತ್ರಜ್ಞರ ಹೆಸರನ್ನು ಉಲ್ಲೇಖಿಸಲಾಗಿದ್ದು, ಅವರ ಸೂಚನೆಯಂತೆ ಡಿಎಂಕೆ ಸರ್ಕಾರವು 2001ರಲ್ಲಿ ಮಾಧ್ಯಮವನ್ನು ಬುಡಮೇಲು ಮಾಡಲು ಯತ್ನಿಸಿತ್ತು ಎಂದು ಆರೋಪಿಸಲಾಗಿದೆ.
ಬೆದರಿಕೆಯ ನಂತರ ತಹಶೀಲ್ದಾರ್ ಕಚೇರಿ ಪರಿಶೀಲಿಸಲಾಗಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.  ಮುನ್ನೆಚ್ಚರಿಕಾ ಕ್ರಮವಾಗಿ ಕಾರವಾರದಿಂದ ಬಾಂಬ್ ನಿಷ್ಕ್ರೀಯ ದಳವನ್ನು ಭಟ್ಕಳಕ್ಕೆ ಕರೆಸಿಕೊಳ್ಳಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement