ಜಲಪೈಗುರಿ: ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ಜಿಲ್ಲೆಯ ರಾಜರ್ಹಾಟ್, ಬರ್ನಿಷ್, ಬಾಕಲಿ, ಜೋರ್ಪಕಡಿ, ಮಾಧಬ್ಡಾಂಗಾ, ಸಪ್ತಿಬಾರಿ ಮೊದಲಾದ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ. ಪರಿಹಾರ ಕಾರ್ಯಗಳಿಗಾಗಿ ನಾಗರಿಕ ಆಡಳಿತ ಅಧಿಕಾರಿಗಳು, ಪೊಲೀಸರು ಮತ್ತು ವಿಪತ್ತು ನಿರ್ವಹಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಭಾನುವಾರ ತಡರಾತ್ರಿ ಜಲಪೈಗುರಿ ಜಿಲ್ಲೆಗೆ ದೌಡಾಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
‘ಮಳೆ ಸಂಬಂಧಿ ಅವಘಡದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರ ಕುಟುಂಬ ಸದಸ್ಯರನ್ನು ಮತ್ತು ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲಾಗುವುದು’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, ‘ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ’ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಬಲವಾದ ಗಾಳಿ ಮತ್ತು ಭಾರೀ ಮಳೆಯು ಆಗ್ನೇಯ ಮಣಿಪುರ ಮತ್ತು ಅಸ್ಸಾಂನ ಜೋರ್ಹತ್ ಅನ್ನು ಅಪ್ಪಳಿಸಿದೆ. ಇದರಿಂದಾಗಿ ಮನೆಗಳು ಮತ್ತು ಬೆಳೆಗಳಿಗೆ ತೀವ್ರ ಹಾನಿಯಾಗಿದೆ. ಅಧಿಕಾರಿಗಳ ಪ್ರಕಾರ, ಹಲವಾರು ಮನೆಗಳಿಗೆ ಹಾನಿಯಾಗಿದೆ ಮತ್ತು ಜಾನುವಾರುಗಳು ಮತ್ತು ಬೆಳೆಗಳಿಗೆ ಹೆಚ್ಚಿನ ಹಾನಿಯಾಗಿದೆ.
“ಮಳೆ ಮತ್ತು ಆಲಿಕಲ್ಲು ಮಳೆಯು ಮಣಿಪುರದ ಹಲವಾರು ಭಾಗಗಳನ್ನು ಹೊಡೆದು ತೌಬಲ್ನ ಸಪಂ ಲೈಕೈ ಮತ್ತು ಖೋಂಗ್ಜೋಮ್ ಗ್ರಾಮಗಳಲ್ಲಿ ಮನೆಗಳು, ಕಟ್ಟಡಗಳು ಮತ್ತು ಬೆಳೆಗಳಿಗೆ ಹಾನಿಯನ್ನುಂಟುಮಾಡಿದೆ” ಎಂದು ವರದಿಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ