ಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಗೆ ಸಿಐಡಿ ಪರ ವಕೀಲರಾದ ಎಸ್ಪಿಪಿ ಮಹೇಶ್ ವೈದ್ಯ, ನೇಹಾ ಕುಟುಂಬದ ಪರ ವಕೀಲ ರಾಘವೇಂದ್ರ ಮುತ್ತಗಿಕರ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು.
ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್ ಅರ್ಜಿ ಸಲ್ಲಿಸಿದ್ದ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನಗೆ ಹೇಗೆ ಜಾಮೀನು ನೀಡಲಾಗಿದೆಯೋ ಅದೇರೀತಿ ತನಗೂ ಜಾಮೀನು ನೀಡಿ ಎಂದು ಮನವಿ ಮಾಡಿದ್ದ. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿ ಫಯಾಜ್ಗೆ ಇದೇ ತಿಂಗಳ 6ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ.
ಏ.18ರಂದು ಆರೋಪಿ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ.


ನಿಮ್ಮ ಕಾಮೆಂಟ್ ಬರೆಯಿರಿ