ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಸೋಮವಾರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ಜಾರಿ ಮಾಡಿದ್ದು, ಶಾಲಾ ಮಕ್ಕಳನ್ನು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮತ್ತು ಅವರೊಂದಿಗೆ ಮಾಸ್ಕ್ ಇಲ್ಲದೆ ಸಂವಹನ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (ಎನ್ಸಿಪಿಸಿಆರ್) ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಕ್ಕಳನ್ನು ರಾಜಕೀಯ ಚಟುವಟಿಕೆಯಲ್ಲಿ ಬಳಸಿಕೊಂಡಿರುವ ಆರೋಪದ ಮೇಲೆ ತನಿಖೆ ನಡೆಸುವಂತೆ ಸೂಚಿಸಿದೆ.
ಟ್ವಿಟರ್ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೊವನ್ನು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗವು ಈ ಕುರಿತು ಸೂದ್ ಅವರಿಗೆ ಪತ್ರ ಬರೆದು, ಮೇಕೆದಾಟು ಪಾದಯಾತ್ರೆಯ ಸಮಯದಲ್ಲಿ ಶಿವಕುಮಾರ್ ಶಾಲೆಯೊಂದರಲ್ಲಿ ಮಕ್ಕಳೊಂದಿಗೆ ಸಂವಹನ ನಡೆಸುತ್ತಿರುವುದರ ಬಗ್ಗೆ ವಿವರಗಳನ್ನು ಕೇಳಿದೆ.
ಪಾದಯಾತ್ರೆಯ ವೇಳೆ ಅವರು ಶಾಲಾ ಮಕ್ಕಳನ್ನು ಭೇಟಿ ಮಾಡಿರುವುದು ಮಕ್ಕಳನ್ನು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸುವುದಕ್ಕೆ ಸಮಾನವಾಗಿದೆ ಎಂದು ಆಯೋಗ ಹೇಳಿದೆ. ಇದಲ್ಲದೆ, ಶಿವಕುಮಾರ್ ಮತ್ತು ಶಾಲಾ ಮಕ್ಕಳು ಮಾಸ್ಕ್ ಇಲ್ಲದೆ ಕಾಣಿಸಿಕೊಂಡಿದ್ದಾರೆ, ಕೋವಿಡ್ ಪ್ರೋಟೋಕಾಲ್ ಅನ್ನು ಅವರು ಉಲ್ಲಂಘಿಸಿದ್ದಾರೆ ಎಂದು ಅದು ಹೇಳಿದೆ.
ಅವರ ಕೃತ್ಯವು ಬಾಲಾಪರಾಧಿ ಕಾಯಿದೆ, ಸಾಂಕ್ರಾಮಿಕ ರೋಗ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯಿದೆಯಡಿಯಲ್ಲಿನ ನಿಬಂಧನೆಗಳ ಪ್ರಾಥಮಿಕ ಉಲ್ಲಂಘನೆಯಾಗಿದೆ ಎಂದು ಆಯೋಗವು ಹೇಳಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಒಂದು ವಾರದೊಳಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸೂದ್ಗೆ ಸೂಚಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ